ಮಂಗಳೂರು, ನ.21: ದ.ಕ. ಜಿಲ್ಲೆಯಾದ್ಯಂತ ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿರ್ಬಂಧಿಸಿ ನವೆಂಬರ್ 20ರವರೆಗೆ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ನವೆಂಬರ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ ಅಲ್ಲಲ್ಲಿ ಸಣ್ಣಪುಟ್ಟ ಘಟನೆಗಳು ಸಂಭವಿಸುತ್ತಿದ್ದು, ಪರಿಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ನಿರ್ಬಂಧವನ್ನು ಮುಂದುವರಿಸಲಾಗಿದೆ ಎಂದವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಆದೇಶದನ್ವಯ ದ.ಕ. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕ, ಧಾರ್ಮಿಕ, ರಾಜಕೀಯ ಸಭೆ, ಸಮಾರಂಭ ಮತ್ತು ಮೆರವಣಿಗೆ, ಪ್ರತಿಭಟನೆ ಮುಂತಾದವುಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ.
ಬಂಟ್ವಾಳ : ವರ್ಷಾವಧಿ ಜಾತ್ರೆ ಹಿನ್ನೆಲೆ – ನ.21-22:ಬಾರ್ ಮುಚ್ಚಲು ಆದೇಶ
ಮಂಗಳೂರು, ನ.21: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳ್ತಮಜಲು ಗ್ರಾಮದ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಲಕ್ಷ ದಿಪೋತ್ಸವದ ಸಂದರ್ಭದಲ್ಲಿ ಮೆರವಣಿಗೆ ಹೋಗುವ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಡ್ಕದ ಪ್ರಶಾಂತ್ ವೈನ್ಸ್ ಮತ್ತು ಜಯಶ್ರೀ ಬಾರ್ ಆ್ಯಂಡ್ ರೆಸ್ಟೋರೆಂಟ್ನ್ನು ನ.21ರಂದು ಬೆಳಗ್ಗೆ 6 ಗಂಟೆಯಿಂದ ನ.22ರ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಲು ಜಿಲ್ಲಾ ದಂಡಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶ ನೀಡಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.