ಮಂಗಳೂರು, ನ.29: ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 28 ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಗಳಲ್ಲಿ 22 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ದಾಖಲಾಗಿರುವಂತಹದ್ದು ಆತಂಕಕಾರಿ ಬೆಳವಣಿಗೆ. ಪ್ರಚೋದನಾಕಾರಿ ಭಾಷಣಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತದ ತೀರ್ಮಾನಕ್ಕೆ ಬರಬೇಕಾಗಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಕೊಲೆ ಪ್ರಕರಣಗಳು ಮತ್ತು ಬಂದ್ ಮುಂತಾದ ವಿಚಾರಗಳು ಕರಾವಳಿ ಜಿಲ್ಲೆಗಳಲ್ಲಿ ಸಂಘರ್ಷದ ವಾತವರಣ ಉಂಟು ಮಾಡುತ್ತಿದ್ದು, ಈ ರೀತಿಯ ಪ್ರಚೋದನಾಕಾರಿ ಭಾಷಣಗಳನ್ನು ನಿರ್ಬಂಸುವಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಸರಕಾರಕ್ಕೆ ಸಲಹೆ ನೀಡಲಾಗಿದೆ. ಅಲ್ಲದೆ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಮನಪಾ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಮನಪಾ ಸಚೇತಕ ಶಶಿಧರ್ ಹೆಗ್ಡೆ, ಮನಪಾ ಸ್ಥಾಯಿಯ ಸಮಿತಿ ಅಧ್ಯಕ್ಷ ಅಶೋಕ್ ಡಿ.ಕೆ., ಕಾಂಗ್ರೆಸ್ ಮುಖಂಡ ನಝೀರ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.