ಮಂಗಳೂರು,ನ,30: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ನ ದ್ವೈವಾರ್ಷಿಕ ಚುನಾವಣೆಯನ್ನು ಡಿ.27ರಂದು ನಡೆಸಲು ನಿರ್ದೇಶಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ, ದ.ಕ.ಜಿಲ್ಲೆ ಹಾಗೂ ಉಡುಪಿ ವ್ಯಾಪ್ತಿಯ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗೆ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು, ಲೋಕ ಸಭಾ, ರಾಜ್ಯ ಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು ಸೇರಿ ಒಟ್ಟು 6,559 ಮತದಾರರಿದ್ದಾರೆ ಎಂದರು.
ಚುನಾವಣೆ ಹಿನ್ನೆಲೆಯಲ್ಲಿ ಡಿ.2 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಡಿಸೆಂಬರ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 10ರಂದು ನಾಮ ಪತ್ರ ಪರಿಶೀಲನೆ ನಡೆಯಲಿದೆ. ಡಿ.12 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ ಎಂದು ಅವರು ತಿಳಿಸಿದರು.
ಮತದಾನವನ್ನು ಸಂಪೂರ್ಣ ವಿಡಿಯೋಗ್ರಫಿ ಮಾಡಲಾಗುವುದು. ದ.ಕ.ಜಿಲ್ಲಾಧಿಕಾರಿ ಚುನಾವಣಾಧಿಕಾರಿಯಾಗಿದ್ದು, ಅಪರ ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಮತದಾರರಲ್ಲಿ 4 ಜನ ಅನಕ್ಷರಸ್ಥರಿದ್ದು ಇವರಿಗೆ ಮತದಾನ ಮಾಡಲು ಸಹಾಯ ಬೇಕಾಗಿದ್ದಲ್ಲಿ ಜಿಲ್ಲಾಧಿಕಾರಿಗೆ ಲಿಖಿತ ವರದಿ ನೀಡಿದ್ದಲ್ಲಿ ಸಹಾಯಕರನ್ನು ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಶಾಂತಿ ಕಾಪಾಡಲು ಮನವಿ: ಚುನಾವಣೆ ಹಿನ್ನೆಲೆಯಲ್ಲಿ ಡಿ.6 ರಂದು ನಿಷೇಧಾಜ್ಞೆ ಹಿನ್ನೆಲೆ ಯಾವುದೇ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ತಿಂಗಳ ಕೊನೆಯಲ್ಲಿ ಹಬ್ಬ ಹರಿದಿನಗಳಿರುವುದರಿಂದ ಜನ ಶಾಂತಿಯನ್ನು ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.