ಮಂಗಳೂರು,ಜ.26 : ಹುಸಿ ಬಾಂಬ್ ಕರೆಯೊಂದು ಬಂದ ಪರಿಣಾಮ ನಗರದಲ್ಲೆಡೆ ಕಟ್ಟೆಚ್ಚರ ವಹಿಸಿರುವ ಪೊಲೀಸರು ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ಕಂಕನಾಡಿ ಮಾರ್ಕೆಟ್ನಲ್ಲಿ ಬಾಂಬ್ ಇಡಲಾಗಿದೆ ಎಂದು ಕಂಕನಾಡಿಯ ಟೆಲಿಫೋನ್ ಬೂತ್ ಒಂದರಿಂದ ಕರೆ ಬಂದ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ನಗರ ಪೊಲೀಸರು ಮಂಗಳೂರು ಕಮಿಷನರ್ ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹುಡುಕಾಟ ನಡೆಸಿದ ಸಂದರ್ಭ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂದು ತೀರ್ಮಾನಕ್ಕೆ ಬರಲಾಗಿದೆ.
ಇದೇ ಸಂದರ್ಭ ಮಂಗಳೂರಿನ ಸೆಂಟ್ರಲ್ ಮಾರ್ಕೇಟ್ ಹಾಗೂ ಇನ್ನಿತರ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿದ ಪೊಲೀಸರು ಅಲ್ಲಿ ಕೂಡ ತಪಾಸಣೆ ನಡೆಸಿದ್ದಾರೆ.
ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ದಿನ ರಾತ್ರಿಯವರೆಗೆ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರತಿಷ್ಠಿತ ಮಾಲ್ಗಳಲ್ಲಿ ಪೊಲೀಸರಿಂದ ತಪಾಸಣೆ ನಡೆಯಲಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಹುಸಿ ಬಾಂಬ್ ಕರೆ ಮಾಡಿದ ಯುವಕನ ಸೆರೆ..?
ಕಂಕನಾಡಿ ಮಾರುಕಟ್ಟೆಯಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣಗೊಳಪಡಿಸಿದ್ದಾರೆ ಎಂದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಹುಸಿ ಬಾಂಬ್ ಕರೆ ಮಾಡಿ ಪೊಲೀಸರ ಅತಿಥಿಯಾದ 17 ವರ್ಷದ ಯುವಕ ನಗರದ ಕಂಕನಾಡಿ ಮಾರುಕಟ್ಟೆಯ ನೌಕರ ಎಂದು ಹೇಳಲಾಗಿದೆ.
ಹುಸಿ ಬಾಂಬ್ ಕರೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ ಮಾರ್ಗದರ್ಶನದಲ್ಲಿ ನಗರದ ಬಾಂಬ್ ಸ್ಕ್ವಾಡ್ನ ಪ್ರಭಾರ ಸಬ್ ಇನ್ಸ್ಪೆಕ್ಟರ್ ಸೋಮಪ್ಪ ನಾಯಕ್ ನೇತೃತ್ವದಲ್ಲಿ ನಗರದ ಕೇಂದ್ರ ಮಾರುಕಟ್ಟೆ ಹಾಗೂ ಕಂಕನಾಡಿ ಮಾರುಕಟ್ಟೆಯಲ್ಲಿ ಪೊಲೀಸರು ಶ್ವಾನದಳದೊಂದಿಗೆ ತಪಾಸಣೆ ನಡೆಸಿದ್ದರು.