ಮಂಗಳೂರು, ಎ. 14: ದ.ಕ.ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ದ.ಕ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಇದರ ಸಂಯುಕ್ತ ಅಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಸಚಿವ ಯು.ಟಿ.ಖಾದರ್ ಭಾಗವಹಿಸಿದ್ದರು. ಮಂಗಳೂರು ದಕ್ಷಿಣಾ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥ ವಿಶ್ವನಾಥ ಅವರು ಅಂಬೇಡ್ಕರ್ ಅವರ ಬಗ್ಗೆ ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಜ್ಯೋತಿ ಟಾಕೀಸ್ ಸಮೀಪದ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಜಾಥಾ ಏರ್ಪಡಿಸಲಾಗಿತ್ತು.
ದ.ಕ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಮಂಗಳೂರು ನಗರ ಪೊಲೀಸ್ ಆಯುಕ್ತ ಚಂದ್ರಶೇಖರ ಎಸ್., ದ.ಕ. ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ, ದ.ಕ ಜಿಲ್ಲಾ ಎಸ್ಪಿ ಶರಣಪ್ಪ ಎಸ್.ಡಿ., ಮನಪಾ ಆಯುಕ್ತ ಡಾ.ಎಚ್.ಎಸ್.ಎನ್.ಗೋಪಾಲಕೃಷ್ಣ, ದ.ಕ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಜಿ.ಸಂತೋಷ್ ಕುಮಾರ್, ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್, ಮೂಡ ಆಯುಕ್ತ ಮುಹಮ್ಮದ್ ನಝೀರ್, ಡಿಎಫ್ಒ ಡಾ.ಹನುಮಂತಪ್ಪ, ಮಂಗಳೂರು ಸಹಾಯಕ ಕಮೀಷನರ್ ಡಾ.ಅಶೋಕ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.