ಮಂಗಳೂರು,ಮೇ.06: ಕರ್ನಾಟಕದ ಕರಾವಳಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳು, ಆಸ್ತಿಗಳು, ಶಾಪಿಂಗ್ ಮಾಲ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಕಣ್ಗಾವಲು ಇರಿಸಲಾಗುತ್ತಿದೆ ಎಂದು ಕರಾವಳಿ ರಕ್ಷಣಾ ಪಡೆಯ ಕರ್ನಾಟಕ ವಿಭಾಗದ ಮಹಾನಿರೀಕ್ಷಕ ಕೆ.ಆರ್. ಸುರೇಶ್ ಹೇಳಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಾರಾವಳಿ ತೀರಗಳಲ್ಲಿ ಭದ್ರತೆಗೆ ಸಂಬಂಧಿಸಿ ವಿವಿಧ ಸಂಘ ಸಂಸ್ಥೆಗಳು, ಬೃಹತ್ ಕೈಗಾರಿಕೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯವು 17 ದ್ವೀಪಗಳೊಂದಿಗೆ 320 ಕಿ.ಮೀ ಉದ್ದದ ಕರಾವಳಿ ತೀರವನ್ನು ಹೊಂದಿದ್ದು, ಕರಾವಳಿ ಭದ್ರತೆ ಗಂಭೀರ ವಿಷಯವಾಗಿರುವುದರಿಂದ ಪ್ರಮುಖ ಸ್ಥಳಗಳನ್ನು ಕಣ್ಗಾವಲಿನಲ್ಲಿರಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಡಿಸಿಪಿ(ಅಪರಾಧ ಮತ್ತು ಸಂಚಾರ)ಡಾ.ಸಂಜೀವ ಎಂ.ಪಾಟೀಲ್, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನ್ಸೆಂಟ್ ಶಾಂತಕುಮಾರ್, ಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.