ಮ೦ಗಳೂರು, ಮೇ.17: ಪ್ರಸಕ್ತ ವರ್ಷ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ನೆರೆ, ಸಮುದ್ರ ಕೊರೆತ, ಮಾನವ ಜೀವ ಹಾನಿ, ವಾಸದ ಮನೆಗಳ ಹಾನಿ ಮತ್ತಿತರ ಪ್ರಕೃತಿ ವಿಕೋಪಗಳಿಂದ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2016ನೇ ಸಾಲಿನ ಮುಂಗಾರು ಮಳೆಯ ಪೂರ್ವಸಿದ್ಧತೆ ಹಾಗೂ ಮುಂಜಾಗರೂಕತಾ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಸಭೆ ನಡೆಸಿ ಮಾತನಾಡಿದರು. ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಈ ವರ್ಷ ದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶದಲ್ಲಿ ಹೆಚ್ಚು ಮಳೆಯಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಈಗಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಎಲ್ಲಾ ತಾಲೂಕಿಗಳಲ್ಲಿ ತುರ್ತು ನಿರ್ವಹಣಾ ತಂಡಗಳನ್ನು ಮತ್ತು ತುರ್ತು ಕಂಟ್ರೋಲ್ ರೂಂಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ತುರ್ತು ಕೇಂದ್ರವನ್ನು ಎಲ್ಲ ಸೌಲಭ್ಯಗಳೊಂದಿಗೆ ಸಿದ್ಧಗೊಳಿಸಬೇಕು ಎಂದು ಅವರು ತಿಳಿಸಿದರು.
ಬೋಟುಗಳು, ಲೈಫ್ ಜಾಕೆಟ್ ಮತ್ತಿತರ ಸಾಧನಗಳನ್ನು ಸಜ್ಜುಗೊಳಿಸಲು ಅವರು ತಿಳಿಸಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ, ಆರೋಗ್ಯ ಸೇವೆ, ಆಹಾರ, ವಿದ್ಯುತ್ ಮತ್ತಿತರ ವಿಷಯಗಳ ಕಡೆ ಗಮನಹರಿಸುಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪ್ರಕೃತಿಕ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಟಾಸ್ಕ್ಫೋರ್ಸ್ ಉಪಸಮಿತಿ ರಚಿಸಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಇದರ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಸಭೆಗೆ ತಿಳಿಸಿದರು.
ಕರಾವಳಿ ತಟ ರಕ್ಷಣಾ ಪಡೆಯ ಕಮಾಂಡರ್ ಡಾ. ಅಜಯ್ ಮಾತನಾಡಿ, ತೀವ್ರ ವಿಕೋಪ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಗಮನಹರಿಸಬೇಕು ಎಂದರು.ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಕೋಸ್ಟ್ಗಾರ್ಡ್ಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.