ಮಂಗಳೂರು, ಮೇ.19 : ಎತ್ತಿನಹೊಳೆ ಯೋಜನೆ ವಿರೋಧಿಸಿ,ಯೋಜನೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ನೇತ್ರಾವತಿ ರಕ್ಷಣಾ ಸಮಿತಿ ವತಿಯಿಂದ ಕರೆ ನೀಡೆಲಾಗಿದ್ದ ಸ್ವಯಂ ಪ್ರೇರಿತ ಬಂದ್ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಎಲ್ಲಾ ಧರ್ಮ ಹಾಗೂ ಸಂಘಟನೆಗಳು ಬಂದ್ ನ್ನು ಬೆಂಬಲಿಸುವ ಮೂಲಕ ಬಂದ್ ಯಶಸ್ವಿಗೊಳಿಸಿದ್ದಾರೆ ಎಂದು ನೇತ್ರಾವತಿ ರಕ್ಷಣಾ ಸಮಿತಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಎತ್ತಿನ ಹೊಳೆ ಯೋಜನೆಯನ್ನು ವಿರೋಧಿಸಿ, ಯೋಜನೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ನೇತ್ರಾವತಿ ರಕ್ಷಣಾ ಸಮಿತಿಯ ನೇತೃತ್ವದಲ್ಲಿ ಗುರುವಾರ ನಗರದ ಲಾಲ್ ಭಾಗ್ ಜಂಕ್ಷನ್ನಲ್ಲಿ ಹಮ್ಮಿಕೊಳ್ಳಲಾದ ಮಾನವ ಸರಪಳಿ ಮೂಲಕ ರಸ್ತೆ ತಡೆ ಹಾಗೂ ಬಳಿಕ ನಡೆದ ಪ್ರತಿಭಟನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಂಟ್ವಾಳ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಕೂಡ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯರ ಕ್ಷೇತ್ರದಲ್ಲೂ ಬಂದ್ ಬಿಸಿ ತಟ್ಟಿದೆ. ಇದನ್ನು ನೋಡಿಯಾದರೂ ಸಚಿವ ರಮಾನಾಥ ರೈಯವರು ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ಕರಾವಳಿಯ ಜನತೆಯ ನೋವವನ್ನು ಅರ್ಥ ಮಾಡಿಕೊಂಡು ಯೋಜನೆ ಸ್ಥಗಿತದ ಬಗ್ಗೆ ಯತ್ನಿಸಲಿ ಎಂದು ವಿಜಯ್ ಕುಮಾರ್ ಶೆಟ್ಟಿ ಹೇಳಿದರು.
ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ತಜ್ಞರ ಸಮಿತಿಯಿಂದ ಎತ್ತಿನಹೊಳೆ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಪಡೆದುಕೊಂಡು ಕರಾವಳಿಯ ಜನತೆಯ ಹೋರಾಟಕ್ಕೆ ಬೆಲೆ ನೀಡಬೇಕು., ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ರೀತಿಯ ಹೋರಾಟವನ್ನು ನಡೆಸಲಾಗುವುದು. ಈ ಸಂದರ್ಭದಲ್ಲಿ ಉಂಟಾಗುವ ಕಷ್ಟ ನಷ್ಟಗಳಿಗೆ ರಾಜ್ಯ ಸರಕಾರವೇ ಹೊಣೆಯಾದಿತ್ತು ಎಂದು ವಿಜಯ್ ಕುಮಾರ್ ಶೆಟ್ಟಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಅನಂದ್ ಶೆಟ್ಟಿ ಅಡ್ಯಾರ್, ದಿನಾಕರ್ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Comments are closed.