ಮಂಗಳೂರು, ಮೇ.20: ಎತ್ತಿನಹೊಳೆ ಯೋಜನೆ ವಿರುದ್ಧ ಸಿಡಿದೆದ್ದ ಜಿಲ್ಲೆಯ ಜನರು ಜಾತಿ-ಧರ್ಮ ಮರೆತು ಒಗ್ಗೂಡಿ ಹೋರಾಟದಲ್ಲಿ ಪಾಲ್ಗೊಂಡಿದ್ದು, ಸರಕಾರ ಇದಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಪರಿಣಾಮಕಾರಿಯಾದ ಹೋರಾಟಗಳನ್ನು ನಡೆಸಲಾಗುವುದು. ಈ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆಯನ್ನು ಸದ್ಯದಲ್ಲೇ ನಿರ್ಧರಿಸಲಾಗುವುದು ಎಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿ ತಿಯ ಅಧ್ಯಕ್ಷ ವಿಜಯ್ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆ ವಿರುದ್ಧ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಸ್ವಯಂ ಪ್ರೇರಿತ ಜಿಲ್ಲಾ ಬಂದ್ ಸಂಪೂರ್ಣ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹಂಪನಕಟ್ಟೆ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಬಂದ್ನಲ್ಲಿ ಪಾಲ್ಗೊಂಡ ಜಿಲ್ಲೆಯ ಜನತೆಗೆ ಅವರು ಅಭಿನಂದನೆ ಸಲ್ಲಿಸಿದರು.
ಪ್ರತಿಭಟನ ಸಭೆಯಲ್ಲಿ ಪಾಲ್ಗೊಂಡಿದ್ದ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಅವರು, ನೀರಿಗಾಗಿ ಮಹಾ ಸಂಗ್ರಾಮ ನಡೆಯುವ ಮುನ್ನವೇ ಸರಕಾರ ಎಚ್ಚೆತ್ತು ಜಿಲ್ಲೆಯ ಜನರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೊಸಾರಿಯೊ ಚರ್ಚ್ನ ಧರ್ಮ ಗುರು ಜೆ.ಬಿ.ಕ್ರಾಸ್ತಾ, ಹೋರಾಟ ಸಮಿತಿಯ ಸಂಚಾಲಕ ದಿನೇಶ ಹೊಳ್ಳ , ಸಮಿತಿಯ ಪದಾಧಿಕಾರಿಗಳಾದ ಎಂ.ಜಿ. ಹೆಗಡೆ, ಡಿ.ಎಂ.ಅಸ್ಲಂ, ಸತ್ಯಜಿತ್ ಸುರತ್ಕಲ್, ಜಗದೀಶ್ ಶೇಣವ, ಅಣ್ಯಯ್ಯ ಕುಲಾಲ್, ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನ್ೀಖಾನ್ ಕೊಡಾಜೆ, ಪ್ರಧಾನ ಕಾರ್ಯದರ್ಶಿ ನವಾಝ್ ಉಳ್ಳಾಲ, ರಾಜ್ಯ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ, ಅನ್ವರ್ ಸಾದಾತ್ ಬಜತ್ತೂರು, ವಕೀಲ ದಿನಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Comments are closed.