ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ‘ಭ್ರಷ್ಟಾಚಾರ ವಿರೋಧಿ ಭಾರತ’ ತಂಡದ ಪ್ರಮುಖ ಸದಸ್ಯೆಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಗುರುವಾರ ಬಿಜೆಪಿ ಸೇರಿದರು.
ಪಕ್ಷದ ಕಚೇರಿಯಲ್ಲಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಹಾಗೂ ಹರ್ಷವರ್ಧನ್ ವಿಧ್ಯುಕ್ತವಾಗಿ ಬರಮಾಡಿಕೊಂಡರು.
ಫೆಬ್ರವರಿ 7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಹಣಿಯುವ ತಂತ್ರದ ಭಾಗವಾಗಿ ಬಿಜೆಪಿ ಅವರನ್ನು ಪಕ್ಷಕ್ಕೆ ಕರೆತಂದಿದೆ ಎನ್ನಲಾಗಿದೆ.
ಪ್ರತಿಷ್ಠಿತ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೇಡಿ ಕೂಡ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯಲ್ಲಿರುತ್ತಾರೆ ಎಂಬ ಊಹಾಪೋಹವೂ ಕೇಳಿಬಂದಿದೆ.
ಆದರೆ, ಬೇಡಿ ಅವರನ್ನು ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಷಾ, ಪಕ್ಷದ ಸಂಸದೀಯ ಮಂಡಳಿ ಈ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಗುಣಗಳಿಂದ ಆಕರ್ಷಿತಳಾಗಿ ಬಿಜೆಪಿ ಸೇರಿದ್ದೇನೆ’ ಎಂದು ಕಿರಣ್ ಬೇಡಿ ಹೇಳಿದರು.