ಶಹಜನಾಪುರ್: ದಲಿತ ಹುಡುಗಿ ಮೇಲ್ಜಾತಿಯ ಹುಡುಗನನ್ನು ಪ್ರೇಮಿಸಿ ಆತನ ಜೊತೆ ಓಡಿ ಹೋಗಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು 5 ದಲಿತ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಶಹಜನಾಪುರ್ ಜಿಲ್ಲೆಯ ಹರೇವಾ ಗ್ರಾಮದಲ್ಲಿ ನಡೆದಿದೆ.
ಮಹಿಳೆಯರನ್ನು ಬೆತ್ತಲು ಗೊಳಿಸಿದ 15 ಮಂದಿ ಗ್ರಾಮಸ್ಥರು ಮಹಿಳೆಯರಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ನಂತರ ಬೀದಿ ಬೀದಿಗಳಲ್ಲಿ ಎಳೆದಾಡಿ, ನಡು ರಸ್ತೆಯಲ್ಲಿ ನಿಲ್ಲಿಸಿ ಅವಮಾನಗೊಳಿಸಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳದಿದ್ದದ್ದೂ ಆಕ್ರೋಶಕ್ಕೆ ಕಾರಣವಾಗಿದೆ.
ಬೇರೆ ಊರಿನ ಜನರು ಬರುವವರೆಗೂ ದಲಿತ ಮಹಿಳೆಯರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹುಡುಗಿಯ ತಂದೆ ಸೇರಿ ನಾಲ್ವರನ್ನು ಬಂಧಿಸಿದ್ದು, 15 ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.
ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿರುವ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ತೋರುತ್ತಿದ್ದೂ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ರಾಜಕಾರಣಿಗಳು ಆಗ್ರಹಿಸಿದ್ದಾರೆ. ಜೊತೆಗೆ ಮಹಿಳೆಯರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಪೊಲೀಸ್ ಮಹಾನಿರ್ದೇಶಕ ಜಿತಿನ್ ಪ್ರಸಾದ್ ಶೀಘ್ರವೇ ಎಲ್ಲಾ ಆರೋಪಿಗಳನ್ನು ಬಂಧಿಸುವದಾಗಿ ತಿಳಿಸಿದ್ದಾರೆ.