ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆ ರದ್ದತಿ ಆದೇಶವನ್ನು ಬುಧವಾರ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಮೂವರು ಹಂತಕರು ನೇಣು ಕುಣಿಕೆಯಿಂದ ಪಾರಾಗಿದ್ದಾರೆ.
ಗಲ್ಲು ಶಿಕ್ಷೆ ರದ್ದತಿ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಸುಪ್ರೀಂ ಪೀಠ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಾದ ಸಂತನ್, ಪೆರಾರಿವಲನ್ ಹಾಗೂ ಮುರುಗನ್ಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ್ದಾರೆ.
ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ರೀತಿಯ ಕರುಣೆ ತೋರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ವಾದ ಮಂಡಿಸಿದ್ದರು. ಆದರೆ ಸರ್ಕಾರದ ವಾದವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಗಲ್ಲು ಶಿಕ್ಷೆ ರದ್ದತಿ ಆದೇಶವನ್ನು ಎತ್ತಿ ಹಿಡಿದಿದೆ.
ಕಳೆದ ವರ್ಷ ರಾಜೀವ್ ಗಾಂಧಿ ಹಂತಕರ ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಬಳಿಕ ಪ್ರಕರಣದಲ್ಲಿ ಗಲ್ಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಗೆ ಗುರಿಯಾದ 7 ಅಪರಾಧಿಗಳನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ಆದರೆ ತಮಿಳುನಾಡು ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
1991 ರಲ್ಲಿ ಎಲ್ ಟಿಟಿಇ ಸಂಘಟನೆ ಉಗ್ರರು ತಮಿಳುನಾಡಿನಲ್ಲಿ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯನ್ನು ಸೂಸೈಡ್ ಬಾಂಬರ್ ಮೂಲಕ ಹತ್ಯೆ ಮಾಡಿದ್ದರು