ಕೋಲ್ಕತಾ: ಬಿಹಾರ್ ವಿಧಾನಸಭೆ ಚುನಾವಣೆಯ ನಂತರ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದತ್ತ ಗಮನಹರಿಸಲು ನಿರ್ಧರಿಸಿದ್ದು ಕೇಂದ್ರೀಯ ನಾಯಕತ್ವದೊಂದಿಗೆ ಚರ್ಚಿಸಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ರಣತಂತ್ರ ರೂಪಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನವೆಂಬರ್ 30 ರಂದು ನಗರಕ್ಕೆ ಆಗಮಿಸುತ್ತಿದ್ದು, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷ ರಾಹುಲ್ ಸಿನ್ಹಾ ಹೇಳಿದ್ದಾರೆ.
ಬಿಹಾರ್ ಚುನಾವಣೆಯ ನಂತರ, ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಂಚೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವಾರು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ದೇಶದ ಒಳಿತಿಗಾಗಿ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಮತ ನೀಡುವಂತೆ ಬಿಹಾರ್ ಜನತೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋರಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿನ್ಹಾ, ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಲ್ಲಿ ಅದರ ಪ್ರಭಾವ ಪಶ್ಚಿಮ ಬಂಗಾಳದ ಮೇಲೆ ಬೀರುವ ಸಾಧ್ಯತೆಗಳಿಂದಾಗಿ ಮಮತಾ ಹೆದರಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.