ನವದೆಹಲಿ: ಇಂಡೋನೇಷ್ಯಾದಿಂದ ಛೋಟಾ ರಾಜನ್ನನ್ನು ಭಾರತಕ್ಕೆ ಕರೆತಂದ ಸಿಬಿಐ ಅಧಿಕಾರಿಗಳು ವಿಚಾರಣೆ ಆರಂಭಿಸಿದ್ದು, ಭೂಗತ ದೊರೆ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ರಾಜನ್ ಬಹಿರಂಗಪಡಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಮುಂಬೈ ಸೇರಿದಂತೆ ದೇಶದ ಇತರ ರಾಜ್ಯಗಳಲ್ಲಿ ದಾವೂದ್ನೊಂದಿಗೆ ನಿರಂತರವಾಗಿ ಸಂಪರ್ಕ ಹೊಂದಿರುವ ವ್ಯಕ್ತಿಗಳ ವಿವರಗಳನ್ನು ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.
ಮುಂಬೈನಲ್ಲಿರುವ ಕೆಲ ಪೊಲೀಸ್ ಅಧಿಕಾರಿಗಳು ದಾವೂದ್ ಇಬ್ರಾಹಿಂನೊಂದಿಗೆ ಸಖ್ಯ ಹೊಂದಿದ್ದಾರೆ ಎಂದು ರಾಜನ್ ಆರೋಪಿಸಿದ್ದಲ್ಲದೇ, ನನ್ನ ಮೇಲೆ ಮುಂಬೈ ಪೊಲೀಸರು ಹೇಯ ದೌರ್ಜನ್ಯ ಎಸಗಿದ್ದಾರೆ ಎಂದು ಗುಡುಗಿದ್ದಾನೆ.
ಮುಂಬೈನಲ್ಲಿರುವ ಕೆಲ ನಿವೃತ್ತ ಪೊಲೀಸ್ ಅಧಿಕಾರಿಗಳು ದಾವೂದ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಿದ್ದರು ಎಂದು ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದಾನೆ.
ಯಾವುದೇ ಕಾರಣಕ್ಕೂ ತಮ್ಮನ್ನು ಮುಂಬೈ ಜೈಲಿನಲ್ಲಿ ಕೈದಿಯಾಗಿಡಬಾರದು ಎಂದು ರಾಜನ್ ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.