ಗುವಾಹಟಿ: ಬಿಹಾರ್ ವಿಧಾನಸಭೆ ಚುನಾವಣೆ ಅಂತ್ಯಗೊಂಡಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮುಂದಿನ ವರ್ಷ ನಡೆಯಲಿರುವ ಆಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ 14 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಬಹುಮತ ಪಡೆದು ರಾಜ್ಯದ ಮೊದಲ ಬಿಜೆಪಿ ಸರಕಾರ ಎನ್ನುವ ಗೌರವ ಪಡೆಯಲು ರಣತಂತ್ರ ರೂಪಿಸಿದೆ.
ಮುಖ್ಯಮಂತ್ರಿ ತರುಣ್ ಗೋಗೈ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದ ಹಿಮಂತಾ ಬಿಸ್ವಾ ಸರ್ಮಾ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಇದೀಗ ಅವರ 9 ಬೆಂಬಲಿಗ ಕಾಂಗ್ರೆಸ್ ಶಾಸಕರು ಕೂಡಾ ಬಿಜೆಪಿ ಪಾಳಯಕ್ಕೆ ಜಿಗಿದಿದ್ದಾರೆ.
ಶರಣಾಗತರಾದ ಉಲ್ಫಾ ನಾಯಕರಿಗೆ ಬಿಜೆಪಿ ಹೆಚ್ಚಿನ ಮಣೆ ಹಾಕುತ್ತಿರುವುದು ಬಿಜೆಪಿ ಮಿತ್ರಪಕ್ಷವಾದ ಎಜಿಪಿ ಮತ್ತು ಇತರ ವಿದ್ಯಾರ್ಥಿ ಸಂಘಟನೆಗಳನ್ನು ಕೆರಳಿಸಿದೆ ಎಂದು ಮೂಲಗಳು ತಿಳಿಸಿವೆ.
ಆಸ್ಸಾಂ ರಾಜ್ಯದ ಉಸ್ತುವಾರಿ ಹೊತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮಾತನಾಡಿ, ರಾಜ್ಯದ ಜನತೆ ಕಾಂಗ್ರೆಸ್ಗೆ ಪರ್ಯಾಯವನ್ನು ಹುಡುಕುತ್ತಿರುವುದರಿಂದ, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಬಿಜೆಪಿ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.