ಪಾಟ್ನಾ: ಬಿಹಾರ್ ವಿಧಾನಸಭೆ ಚುನಾವಣೆ ಸೋಲಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇರ ಕಾರಣರು ಎಂದು ಎನ್ಡಿಎ ಮೈತ್ರಿಕೂಟದ ಹಿಂದುಸ್ತಾನ್ ಅವಾಮ್ ಮೋರ್ಚಾ ಪಕ್ಷದ ಮುಖ್ಯಸ್ಥ ಜಿತನ್ ರಾಮ್ ಮಾಂಜಿ ವಾಗ್ದಾಳಿ ನಡೆಸಿದ್ದಾರೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ದಲಿತರು, ಹಿಂದುಳಿದವರಿಗೆ ನೀಡಲಾಗುತ್ತಿರುವ ಮೀಸಲಾತಿ ಪರಿಷ್ಕರಿಸಬೇಕು ಎಂದು ಹೇಳಿಕೆ ನೀಡಿರುವುದು ಮೈತ್ರಿಕೂಟದ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಹೇಳಿದ್ದಾರೆ.
ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡಲಾಗುತ್ತಿರುವ ಮೀಸಲಾತಿ ಪರಿಷ್ಕರಿಸಬೇಕು ಎನ್ನುವ ಭಾಗವತ್ ಹೇಳಿಕೆ ಎನ್ಡಿಎ ಮೈತ್ರಿಕೂಟಕ್ಕೆ ತಿರುಗುಬಾಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ, ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದಲ್ಲಿ ಪಾಕಿಸ್ತಾನದಲ್ಲಿ ಪಟಾಕಿಗಳು ಸಿಡಿಯುತ್ತವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿರುವುದು ಕೂಡಾ ಸೋಲಿಗೆ ಕಾರಣವಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಹಿಂದುಸ್ತಾನ್ ಅವಾಮ್ ಮೋರ್ಚಾ 20 ಸೀಟುಗಳಲ್ಲಿ ಕಣಕ್ಕಿಳಿದಿತ್ತು ಆದರೆ, ಒಂದು ಒಂದು ಸ್ಥಾನ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಎಚ್ಎಎಂ ಪಕ್ಷದ ಮುಖ್ಯಸ್ಥ ಮಾಂಜಿ ಮಾತ್ರ, ಗಯಾ ಜಿಲ್ಲೆಯ ಇಮಾಮ್ ಗಂಜ್ ಕ್ಷೇತ್ರದಿಂದ ಚುನಾವಣೆ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.