ನವದೆಹಲಿ: ಬಿಜೆಪಿ ದೇಶದಲ್ಲಿ ದ್ವೇಷದ ವಾತಾವರಣ ಹರಡುತ್ತಿದೆ. ಮಡಿಕೇರಿಯಲ್ಲಿ ಟಿಪ್ಪು ಸುಲ್ತಾನ್ ವರ್ಷಾಚರಣೆಯನ್ನು ತಡೆಯುವ ನಿಟ್ಟಿನಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎನ್ನುವ ಬಿಜೆಪಿ ಆರೋಪವನ್ನು ಸಾರಾಸಗಟಾಗಿ ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲಾ ತಳ್ಳಿಹಾಕಿದ್ದಾರೆ.
ಟಿಪ್ಪು ಸುಲ್ತಾನ್ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಅದೇ ಸಂದರ್ಭದಲ್ಲಿ ವಿಎಚ್ಪಿ ನವೆಂಬರ್ 10 ರಂದು ಮಡಿಕೇರಿ ಬಂದ್ಗೆ ಕರೆ ನೀಡಿತ್ತು. ಬಂದ್ ಕರೆ ಸಂದರ್ಭದಲ್ಲಿ ಕಿಡಿಗೇಡಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದಾಗ ಓಡಲು ಹೋದ ವ್ಯಕ್ತಿಯೊಬ್ಬ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ದ್ವೇಷದ ವಾತಾವರಣ ಹರಡುತ್ತಿರುವ ತಮ್ಮ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಜೆಪಿಯ ಸಹೋದರ ಸಂಸ್ಥೆಗಳು ಹಿಂಸೆ ಮತ್ತು ಕೋಮುವಾದಕ್ಕೆ ಪ್ರೋತ್ಸಾಹ ನೀಡುತ್ತಿರುವುದರಿಂದ ಗೃಹ ಸಚಿವ ರಾಜನಾಥ್ ಸಿಂಗ್ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದರು.
ಬಿಜೆಪಿ ಇತಿಹಾಸವನ್ನೇ ತಿರುಚುತ್ತಿದೆ. ರಾಜರು ಮತ್ತು ಸಾಮ್ರಾಜ್ಯಗಳು ಇತಿಹಾಸದ ಭಾಗವಾಗಿವೆ. ಟಿಪ್ಪು ಸುಲ್ತಾನ್ ಶ್ರೀರಂಗಪಟ್ಟಣನ್ನು ರಾಜಧಾನಿಯನ್ನಾಗಿಸಿಕೊಂಡು, ತನ್ನ ಕೊನೆಯ ಉಸಿರು ಇರುವವರೆಗೆ ಹೋರಾಟ ಮಾಡಿದ ಎನ್ನುವುದನ್ನು ಮರೆಯಬಾರದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.