ಅಗರ್ತಲಾ: ಅಚ್ಚರಿಕರ ಬೆಳವಣಿಗೆಯೊಂದರಲ್ಲಿ ತ್ರಿಪುರಾದ ಬಿಜೆಪಿ ಘಟಕ ಕಾಂಗ್ರೆಸ್ ಪಕ್ಷದೊಂದಿಗೆ ಚುನಾವಣಾ ಮೈತ್ರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 9 ರಂದು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿರುವುದರಿಂದ ಎಡಪಕ್ಷಗಳನ್ನು ಸೋಲಿಸಲು ಚುನಾವಣಾ ಮೈತ್ರಿ ಮಾಡಿಕೊಳ್ಳುವಂತೆ ಬಿಜೆಪಿ ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್ ಪಕ್ಷವನ್ನು ಕೋರಿದೆ.
ಒಂದು ವೇಳೆ ಕಾಂಗ್ರೆಸ್ ಪಕ್ಷ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸದಿದ್ದಲ್ಲಿ ಎಡಪಕ್ಷಗಳನ್ನು ಸೋಲಿಸಲು ಸಹಕಾರಿಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಧೀಂದ್ರ ದಾಸ್ ಗುಪ್ತಾ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿಯಾದರೂ ಮಾಡಿಕೊಳ್ಳಲಿ ಅಥವಾ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬಿಜೆಪಿ ಪ್ರಭಾವದಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.
ಕಳೆದ ಲೋಕಸಭೆ, ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಗೆ ಬಂದಿರುವ ಮತಗಳನ್ನು ನೋಡಿದಲ್ಲಿ ಬಿಜೆಪಿ ರಾಜ್ಯದಲ್ಲಿ ಆಳವಾಗಿ ಬೇರೂರುತ್ತಿದೆ ಎನ್ನುವುದು ಖಚಿತವಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಸ್ಪರ್ಧೆಯಿಂದಾಗಿ ಮತಗಳು ವಿಭಜನೆಗೊಂಡು ಸಿಪಿಐ-ಎಂ ಚುನಾವಣೆಯಲ್ಲಿ ಜಯಗಳಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಧೀಂದ್ರ ದಾಸ್ ಗುಪ್ತಾ ಹೇಳಿದ್ದಾರೆ.