ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದ ದಿನವಾದ ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕಳೆದ ಕೆಲ ತಿಂಗಳುಗಳಿಂದ ದೇಶದಲ್ಲಿ ನಡೆಯುತ್ತಿರುವ ಘಟನೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದು ಟೀಕಿಸಿದರು.
ಸಂವಿಧಾನ ರಚನೆಯಲ್ಲಿ ಯಾವುದೇ ಪಾತ್ರವಹಿಸದ ಬಿಜೆಪಿ ನಾಯಕರು, ಇದೀಗ ಸಂವಿಧಾನದ ರಕ್ಷಕರಂತೆ ವರ್ತಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ದೇಶದಲ್ಲಿ ಸಂವಿಧಾನ ರಚಿಸುವಾಗ ಕಾಂಗ್ರೆಸ್ ಪಕ್ಷದ ಶ್ರಮ ಅಪಾರ. ಇದೀಗ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಬಂದಿದೆ. ಕಳೆದ ಕೆಲ ತಿಂಗಳುಗಳಿಂದ ನಡೆಯುತ್ತಿರುವ ಘಟನೆಗಳು ಸಂವಿಧಾನದ ಮೌಲ್ಯಗಳಿಗೆ ತದ್ವಿರುದ್ಧವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತಮ ಸಂವಿಧಾನವಾಗಿದ್ದರೂ ಅದನ್ನು ಜಾರಿಗೊಳಿಸುವವರು ಕೆಟ್ಟವರಾಗಿದ್ದಲ್ಲಿ ಪರ್ಯಾಯವಾಗಿ ಕೆಟ್ಟ ಪ್ರಭಾವವೇ ಬೀರುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಎಚ್ಚರಿಕೆ ನೀಡಿರುವುದಾಗಿ ಸೋನಿಯಾ, ಮೋದಿ ಸರಕಾರಕ್ಕೆ ಟಾಂಗ್ ನೀಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ 125ನೇ ಜನ್ಮ ಶತಮಾನೋತ್ಸದ ಅಂಗವಾಗಿ ಸಂಸತ್ತಿನಲ್ಲಿ ಎರಡು ದಿನಗಳ ವಿಶೇಷ ಅಧಿವೇಶನ ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ರಚನೆಯಲ್ಲಿ ಕಾಂಗ್ರೆಸ್ ಪಕ್ಷದ ಭಾಗಿತ್ವವನ್ನು ಉದಾಹರಿಸಿದ ಸೋನಿಯಾ, ಹಲವು ದಶಕಗಳ ಹೋರಾಟ, ಶ್ರಮದಿಂದ ಸಂವಿಧಾನ ರಚನೆಯಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಸಂವಿಧಾನ ರಚನೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮರ್ಥ್ಯವನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷ, ಅವರನ್ನು ಸಂವಿಧಾನ ರಚನೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿತ್ತು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಸ್ಮರಿಸಿದರು.