ನವದೆಹಲಿ: ಎಲ್ಲ ನಾಗರಿಕರಂತೆ ನಾವೂ ಈ ದೇಶದ ಕಾನೂನು ಪಾಲಿಸಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಪಟಿಯಾಲ ಹೌಸ್ ಕೋರ್ಟ್ನಿಂದ ಜಾಮೀನು ಪಡೆದ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, ನಾವು ಶುದ್ಧ ಮನಸ್ಸಿನಿಂದ ಇಂದು ಕೋರ್ಟ್ಗೆ ಹಾಜರಾಗಿದ್ದೇವೆ. ಎಲ್ಲಾ ನಾಗರಿಕರಂತೆ ನಾನೂ ಈ ದೇಶದ ಕಾನೂನು ಪಾಲಿಸಿದ್ದೇನೆ. ದೇಶದ ಕಾನೂನು ಎಲ್ಲರಿಗೂ ಒಂದೇ ಎಂದರು.
ನ್ಯಾಯಾಂಗದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದ್ದು, ಪ್ರಕರಣದ ಸತ್ಯಾಂಶ ಹೊರ ಬರುವ ವಿಶ್ವಾಸವಿದೆ ಎಂದು ಸೋನಿಯಾ ಹೇಳಿದರು.
ರಾಜಕೀಯ ದ್ವೇಷದಿಂದ, ಉದ್ದೇಶಪೂರ್ವಕವಾಗಿ ನಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ನಾವು ಯಾರಿಗೂ ಹೆದರುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುತ್ತಿದ್ದಾರೆ ಮತ್ತು ಈ ಮೂಲಕ ಪ್ರತಿಪಕ್ಷಗಳನ್ನು ಹೆದರಿಸುತ್ತಿದ್ದಾರೆ. ಆದರೆ ಇದಕ್ಕೆಲ್ಲಾ ನಾವು ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.