ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಈ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ವರದಿ ಸಲ್ಲಿಸಿದೆ.
ಕೇಂದ್ರ ಸರ್ಕಾರ ಕೋರ್ಟ್ಗೆ ಸಲ್ಲಿಸಿರುವ ಪ್ರತಿಕ್ರಿಯೆಯಲ್ಲಿ, ಅರುಣಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಹೇಳಿದೆ.
ನಿನ್ನೆಯಷ್ಟೇ ಕೋರ್ಟ್ಗೆ ಪ್ರತಿಕ್ರಿಯೆ ಸಲ್ಲಿಸಿದ್ದ ಅರುಣಾಚಲ ರಾಜ್ಯಪಾಲ ಜೆ.ಪಿ.ರಾಜ್ಖೋವಾ ಅವರು, ಮಾಜಿ ಮುಖ್ಯಮಂತ್ರಿ ನಬಮ್ ಟುಕಿ ಮತ್ತು ಅವರ ಸಚಿವರ ಬಂಡಾಯ ಚಟುವಟಿಕೆಗಳ ಕಾರಣ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಹೀಗಾಗಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿರುವುದಾಗಿ ಹೇಳಿದ್ದರು.
ಟುಕಿ ಹಾಗೂ ಅವರ ಬೆಂಬಲಿಗರ ಕ್ರಮದಿಂದಾಗಿ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇತ್ತು ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಖೋವಾ ಅವರು ಸುಪ್ರೀಂ ಕೋರ್ಟ್ಗೆ ನೀಡಿದ್ದಾರೆ.
ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದ ಕೇಂದ್ರ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಈ ಸಂಬಂಧ ಕೇಂದ್ರ ಹಾಗೂ ಅರುಣಾಚಲ ರಾಜ್ಯಪಾಲರಿಗೆ ನೋಟಿಸ್ ಜಾರಿ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತ್ತು.