ನವದೆಹಲಿ, ಮಾ.22- ಜವಾಹರ್ಲಾಲ್ ವಿಶ್ವವಿದ್ಯಾನಿಲಯ (ಜೆಎನ್ಯು)ದಲ್ಲಿ ನಡೆದ ಇತ್ತೀಚಿನ ಎಲ್ಲ ಬೆಳವಣಿಗೆಗಳ ಬಳಿಕ ಇದೇ ಮೊದಲ ಬಾರಿಗೆ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ನಯ್ಯಕುಮಾರ್ ಇಂದು ರಾಜಧಾನಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಜೆಎನ್ಯು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಷನ್ (ಎಐಎಸ್ಎಫ್) ಪದಾಧಿಕಾರಿಗಳ ನಿಯೋಗದೊಂದಿಗೆ ಕನ್ನಯ್ಯಕುಮಾರ್ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಹುಲ್ಗಾಂಧಿಯವರ ಇಲ್ಲಿನ ಲೂತ್ಸೇನ್ ನಿವಾಸದಲ್ಲಿ ಭೇಟಿ ಮಾಡಿದರು.
ಜವಾಹರ್ಲಾಲ್ ವಿಶ್ವವಿದ್ಯಾನಿಲಯದಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಕಾರಣಕ್ಕಾಗಿ ಕನ್ನಯ್ಯಕುಮಾರ್ ಸೇರಿದಂತೆ ಹಲವರನ್ನು ಬಂಧಿಸಿದ್ದು, ಬಂಧಿತರನ್ನು ಕಾರಾಗೃಹಕ್ಕೆ ಕಳುಹಿಸಿದ್ದು, ನಂತರ ಅವರನ್ನು ಜಾಮೀನು ಮೇಲೆ ಬಿಡುಗಡೆ ಮಾಡಿದ್ದು, ಮುಂತಾದ ಎಲ್ಲ ವಾದ-ವಿವಾದಗಳೂ ನಡೆದ ನಂತರದಲ್ಲಿ ಮೊದಲ ಬಾರಿಗೆ ಇಂದು ಈ ಭೇಟಿ ನಡೆದಿದೆ. ಜೆಎನ್ಯು ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ಗಾಂಧಿ ಕನ್ನಯ್ಯ ಮತ್ತು ಸಂಗಡಿಗರಿಗೆ ಸಂಪೂರ್ಣ ಬೆಂಬಲ ನೀಡಿದ್ದರು. ಅವರ ಜತೆ ಪ್ರತಿಭಟನೆಯಲ್ಲೂ ಭಾಗವಹಿಸಿದ್ದರು.