ನವದೆಹಲಿ: ಸಾರ್ವಜನಿಕರ ಕುಂದು ಕೊರತೆಗಳನ್ನು ಗರಿಷ್ಠ 2 ತಿಂಗಳ ಅವಧಿಯಲ್ಲಿ ನಿವಾರಣೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರಮೋದಿ, ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಸಾರ್ವಜನಿಕರ ಕುಂದು ಕೊರತೆಗಳನ್ನು ದೂರ ಮಾಡಲು ಅಧಿಕಾರಿಗಳು ವಿಶೇಷ ಒತ್ತು ನೀಡಬೇಕೆಂದು ಕಟ್ಟಪ್ಪಣೆ ಮಾಡಿದ್ದಾರೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸುವುದು ಉತ್ತಮ ಆಡಳಿತದ ಬಹುದೊಡ್ಡ ವಿಚಾರಗಳಲ್ಲಿ ಒಂದಾಗಿದೆ. ಮುಂದಿನ ಒಂದು ತಿಂಗಳಲ್ಲಿ ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕೆಂದು ಪ್ರಧಾನಿ ಸೂಚಿಸಿದ್ದಾರೆ.
ಹಲವಾರು ಸಂವಾದ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ನೀಡಿರುವ ಸಣ್ಣಪುಟ್ಟ ದೂರುಗಳು ಪ್ರಧಾನಮಂತ್ರಿ ಕಛೇರಿ ತಲುಪಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರಮೋದಿ, ಅಧಿಕಾರಿಗಳಿಗೆ ಜವಾಬ್ದಾರಿ ನಿಗದಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ದೇಶಾದ್ಯಂತ ಜಿಲ್ಲಾವಾರು ನಾಗರಿಕರ ಕುಂದು ಕೊರತೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕಾದ ಅಗತ್ಯವನ್ನು ಅವರು ಪ್ರತಿಪಾದಿಸಿದ್ದಾರೆ.
ವಿಧವಾ ಪಿಂಚಣಿ, ಕುಷ್ಠರೋಗ ನಿವಾರಣೆಯಂತಹ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಪ್ರಮುಖ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಅವರು ಪರಿಶೀಲಿಸಿದರು.
ಭೂದಾಖಲೆಗಳ ಡಿಜಿಟಲೀಕರಣ, ಆಧಾರ್ ಖಾತೆಗಳ ಮಾಹಿತಿ ಸಂಗ್ರಹ ಕುರಿತು ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಪ್ರಧಾನಿ ಕಟ್ಟಪ್ಪಣೆ ಮಾಡಿದ್ದಾರೆ.