ಚಂಡೀಗಢ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗದವರ ತಲೆ ಕಡಿಯುತ್ತಿದ್ದೆ. ಆದರೆ, ಸಂವಿಧಾನವನ್ನು ಗೌರವಿಸುವುದರಿಂದ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಸೋಮವಾರ ಹೇಳಿದ್ದಾರೆ.
ಹರಿಯಾಣದಲ್ಲಿ ಆರ್ ಎಸ್ಎಸ್ ಆಯೋಜನೆ ಮಾಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ನಮ್ಮ ದೇಶದ ಕಾನೂನು ಹಾಗೂ ಸಂವಿಧಾನವನ್ನು ಗೌರವಿಸುತ್ತೇವೆ. ಇಲ್ಲದೆ ಹೋಗಿದ್ದರೆ, ಭಾರತ ಮಾತೆಗೆ ಅಗೌರವ ಸೂಚಿಸುವ ಒಬ್ಬರ ತಲೆಯಲ್ಲ ಸಾವಿರ ಹಾಗೂ ಲಕ್ಷ ತಲೆಗಳನ್ನು ಉರುಳಿಸುತ್ತಿದ್ದೆವು ಎಂದು ಹೇಳಿದ್ದಾರೆ.
ಬಾಬಾ ರಾಮ್ ದೇವ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಕಿಡಕಾರಿದ್ದು, ರಾಮ್ ದೇವ್ ಅವರು ಆರ್ ಎಸ್ಎಸ್ ಸಭೆಯಲ್ಲಿ ತಲೆ ಕಡಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ರೀತಿಯ ಹಿಂಸಾತ್ಮಕ ಹೇಳಿಕೆ ನೀಡಿರುವುದು ಸರಿಯಲ್ಲ. ಮೋದಿಯವರು ಇದರ ಬಗ್ಗೆ ಯಾವ ರೀತಿಯ ಕ್ರಮಕೈಗೊಳ್ಳುತ್ತಾರೆಂದು ಕಾದು ನೋಡಬೇಕಿದೆ ಎಂದು ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಟ್ವಿಟರ್ ನಲ್ಲಿ ಹೇಳಿಕೊಂದಿದ್ದಾರೆ.
ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.