
ನವದೆಹಲಿ: ಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ. ಜಾರಿ ನಿರ್ದೇಶನಾಲಯ(ಇಡಿ)ದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಮದ್ಯದ ದೊರೆಯ ಪಾಸ್ ಪೋರ್ಟ್ ಅನ್ನು ಶುಕ್ರವಾರ ಅಮಾನತುಗೊಳಿಸಿದೆ.
ವಿಜಯ್ ಮಲ್ಯ ಅವರಿಗೆ ಜಾರಿ ನಿರ್ದೇಶನಾಲಯ ಈಗಾಗಲೇ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಪಾಸ್ ಪೋರ್ಟ್ ರದ್ದುಗೊಳಿಸಿವಂತೆ ಪಾಸ್ ಪೋರ್ಟ್ ಕಚೇರಿಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅನ್ನು ಅಮಾನತುಗೊಳಿಸಿದೆ.
ಐಡಿಬಿಐ ಬ್ಯಾಂಕ್ ನಿಂದ ಪಡೆದ 900 ಕೋಟಿ ರುಪಾಯಿ ಸಾಲವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮುಂದೆ ವಿಜಯ್ ಮಲ್ಯ ವಿಚಾರಣೆಗೆ ಹಾಜರಾಗಬೇಕಿತ್ತು. ಕಳೆದ ವರ್ಷ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಇಡಿ ವಿಜಯ್ ಮಲ್ಯ ವಿರುದ್ಧ ಹಣ ದುರ್ಬಳಕೆ ಪ್ರಕರಣ ದಾಖಲಿಸಿಕೊಂಡಿದೆ.