ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾಹರ್ತತೆಯನ್ನು ಪ್ರಶ್ನಿಸಿದ್ದ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಪದವಿ ಪ್ರಮಾಣ ಪತ್ರದ ದಾಖಲೆಗಳನ್ನು ಬಿಡುಗಡೆಗೊಳಿಸುವ ಮೂಲಕ ತಿರುಗೇಟು ನೀಡಿದ್ದಾರೆ.
ಮೋದಿ ಅವರ ಪದವಿ ವಿದ್ಯಾರ್ಹತೆಯ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವ ಮೂಲಕ ಸತ್ಯವನ್ನು ಬಹಿರಂಗಪಡಿಸಬೇಕು’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಳೆದ ದೆಹಲಿ ವಿಶ್ವವಿದ್ಯಾಲಯದ ಕುಲಪತಿಗೆ ಪತ್ರ ಬರೆದಿದ್ದರು. ಪ್ರಧಾನಿ ಮೋದಿ ಸುಳ್ಳು ಶೈಕ್ಷಣಿಕ ಮಾಹಿತಿಯನ್ನು ನೀಡಿ 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲಘುವಾಗಿ ಮಾತನಾಡಿದ್ದಕ್ಕೆ ಅರವಿಂದ್ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡುವುದಕ್ಕೂ ಮುನ್ನ ಸತ್ಯ, ಅಸತ್ಯತೆಗಳನ್ನು ಪರಿಗಣಿಸಬೇಕು, ಒಬ್ಬ ಪ್ರಧಾನಿಯ ಪದವಿ ಪ್ರಮಾಣಪತ್ರಗಳನ್ನು ನಾನು ಬಿಡುಗಡೆಗೊಳಿಸುವ ದಿನ ಬರುತ್ತದೆ ಎಂದುಕೊಂಡಿರಲಿಲ್ಲ. ಇಂತಹ ಪರಿಸ್ಥಿತಿ ಎದುರಾಗಿರುವುದಕ್ಕೆ ಅವಮಾನ ಉಂಟಾಗಿದ್ದು ಇದಕ್ಕೆ ಕಾರಣರಾದ ಅರವಿಂದ್ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಆರೋಪಗಳಿಗೆ ತಿರುಗೇಟು ನೀಡಿದ ಅರುಣ್ ಜೇಟ್ಲಿ ತುರ್ತು ಪರಿಸ್ಥಿತಿ ವೇಳೆ ಪ್ರಧಾನಿ ಮೋದಿ ದೆಹಲಿ ವಿಶ್ವವಿದ್ಯಾಲಯಕ್ಕೆ ಪರೀಕ್ಷೆ ಬರೆಯಲು ಬರುತ್ತಿದ್ದರು. ತುರ್ತು ಪರಿಸ್ಥಿತಿಯ ಸಂದರ್ಭದ ನಂತರ ನಾನು ದೆಹಲಿ ವಿದ್ಯಾರ್ಥಿ ಸಂಘದ ನಾಯಕನಾದ ಮೇಲೆ ಈ ವಿಚಾರ ತಿಳಿಯಿತು ಎಂದು ಹೇಳಿದರು.
ಇದೇ ವೇಳೆ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪಡೆದ ಬಿಎ ಪದವಿಯ ಪ್ರಮಾಣ ಪತ್ರವನ್ನು ಪತ್ರಕರ್ತರಿಗೆ ಹಂಚಲಾಯಿತು.