ನವದೆಹಲಿ: ವಿಮಾನ ನಿಲ್ದಾಣಗಳ ಮೇಲೆ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂಬ ಗುಪ್ತಚರ ದಳದ ಮಾಹಿತಿಯ ಮೇರೆಗೆ ಪಾಕ್ ಗಡಿಯ ನಾಲ್ಕು ರಾಜ್ಯಗಳ 22 ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಗುಜರಾತ್ ಹಾಗೂ ದೆಹಲಿಯ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲು ಆಯಾ ರಾಜ್ಯಗಳಿಗೆ ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ನಾಲ್ಕು ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಮತ್ತು ವಿಮಾನ ನಿಲ್ದಾಣ ಭದ್ರತೆಗಾಗಿ ನಿಯೋಜಿತರಾಗಿರುವ ಕೈಗಾರಿಕಾ ಭದ್ರತಾ ಪಡೆ ಮತ್ತು ಅರೆ ಸೇನಾಪಡೆಯ ಅಧಿಕಾರಿಗಳಿಗೆ ಪತ್ರ ಬರೆದಿದೆ. ಜತೆಗೆ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಹ ಪತ್ರ ಬರೆದಿದ್ದು, ಭದ್ರತೆಯನ್ನು ಹೆಚ್ಚಿಸುವಂತೆ ಸೂಚಿಸಿದೆ.
ಪ್ರಯಾಣಿಕರ ಬ್ಯಾಗ್ಗಳು, ವಾಹನ ನಿಲುಗಡೆ ಪ್ರದೇಶ ಮತ್ತು ಸರಕು ಸಾಗಣೆ ವಿಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಹ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 100 ಉಗ್ರರು ದೇಶದ ವಿವಿಧೆಡೆ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.
Comments are closed.