ಲಖನೌ: ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣಕ್ಕೆ ಸಂವಿಧಾನಿಕ ಚೌಕಟ್ಟಿನಲ್ಲಿ ಪ್ರಯತ್ನಿಸಲಾಗುವುದು’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ‘ಲೋಕ ಕಲ್ಯಾಣ ಸಂಕಲ್ಪ ಪತ್ರ’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
‘ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಯುವಜನರಿಗೆ ಲ್ಯಾಪ್ಟಾಪ್ ವಿತರಿಸುವ ಜತೆಗೆ 1 ಜಿಬಿ ಉಚಿತ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಉಚಿತ ವೈಫೈ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.
‘ನಾವು ಅಧಿಕಾರಕ್ಕೆ ಬಂದರೆ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ₹150 ಕೋಟಿ ಮೀಸಲಿಡುತ್ತೇವೆ. ದೀನ್ ದಯಾಳ್ ಸುರಕ್ಷತಾ ಬಿಮಾ ಯೋಜನೆಯಡಿ ಭೂರಹಿತರಿಗೆ ತಲಾ ₹ 2 ಲಕ್ಷದ ವಿಮೆ ಮಾಡಿಸಲಾಗುವುದು’ ಎಂದು ತಿಳಿಸಿದ್ದಾರೆ.
‘ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆ ಜಾರಿಗೆ ತರಲಾಗುವುದು. ಹೊಸದಾಗಿ 25 ವೈದ್ಯಕೀಯ ಕಾಲೇಜು ಮತ್ತು 6 ಕಡೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳನ್ನು (ಏಮ್ಸ್) ಸ್ಥಾಪಿಸಲಾಗುವುದು’ ಎಂದು ಶಾ ಭರವಸೆ ನೀಡಿದ್ದಾರೆ.
Comments are closed.