ಕರ್ನಾಟಕ

ಎಲ್ಲ ಯೋಜನೆಗಳು ಮುಂದಿನ ಮಾರ್ಚ್‌ ವೇಳೆಗೆ ಪೂಣಗೊಳಿಸಿ: ಸಿದ್ದರಾಮಯ್ಯ ಸೂಚನೆ

Pinterest LinkedIn Tumblr


ಬೆಂಗಳೂರು: ಜಾರಿಯಲ್ಲಿರುವ ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನು ಪ್ರಸಕ್ತ ಸಾಲಿನ ಹಣಕಾಸು ವರ್ಷ ಪೂರ್ಣಗೊಳ್ಳುವುದರ ಒಳಗಾಗಿ ಅಚ್ಚುಕಟ್ಟಾಗಿ ಪೂರ್ಣಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿಯವರು ಮಾತನಾಡಿದರು.

ಇದು ಚುನಾವಣೆಯ ವರ್ಷ. ಮುಂದಿನ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಬಹುದು. ಜೊತೆಗೆ ಪ್ರಸಕ್ತ ಸಾಲಿನ ಹಣಕಾಸು ವರ್ಷ ಪೂರ್ಣಗೊಳ್ಳಲು ಇನ್ನೂ ಐದು ತಿಂಗಳಿದೆ. ಆದ್ದರಿಂದ ಎಲ್ಲ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಕಿವಿಮಾತು ಹೇಳಿದ್ದಾರೆ.

ಸರ್ಕಾರಿ ಭೂಮಿ ಒತ್ತುವರಿ ತೆರವು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮನೆ ಮತ್ತು ನಿವೇಶನಗಳ ಹಂಚಿಕೆ, ಇಂದಿರಾ ಕ್ಯಾಂಟೀನ್, ಪಡಿತರ ಚೀಟಿ ಹಂಚಿಕೆ, ಭೂ ಮಂಜೂರಾತಿ ಹಾಗೂ ಹಕ್ಕುಪತ್ರಗಳ ವಿತರಣೆ ಕಡೆ ಹೆಚ್ಚಿನ ಗಮನ ವಹಿಸುವಂತೆ ಸಿಎಂ ಸೂಚಿಸಿದರು.

ಸರ್ಕಾರದ ಆಸ್ತಿ ರಕ್ಷಣೆ ಮಾಡುವುದು ಕಂದಾಯ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಸಹ ಆಗಿದೆ. ಜಿಲ್ಲಾಧಿಕಾರಿಗಳು ಆ ಕಾರ್ಯ ಮಾಡದೇ ಇದ್ದರೆ ಕರ್ತವ್ಯಲೋಪವಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳು ಸಮಾಜಮುಖಿ ಹಾಗೂ ಜನಮುಖಿಯಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳ ನಿರ್ಮಾಣ ನಮ್ಮ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದಕ್ಕಾಗಿ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ. ಒಟ್ಟು 55 ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ನೀಡಿದ್ದು 32 ಲಕ್ಷ ನಿರ್ಮಾಣವಾಗಿವೆ. ಉಳಿದ ಶೌಚಾಲಯಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

10 ಲಕ್ಷ ಗರ್ಭಿಣಿಯರು ಹಾಗೂ ಬಾಣಂತಿಯವರಿಗೆ ಪೌಷ್ಠಿಕ ಆಹಾರ ಒದಗಿಸುವ ಮಾತೃ ಪೂರ್ಣ ಯೋಜನೆ ಕಡೆಗೂ ಕಾಳಜಿ ವಹಿಸಿ. ಅಂಗನವಾಡಿ ಕೇಂದ್ರಗಳ ಮೂಲಕ ಸರ್ಕಾರ ಪೌಷ್ಠಿಕ ಆಹಾರ ಒದಗಿಸುತ್ತಿದೆ. ಮಲೆನಾಡು ಪ್ರದೇಶದಲ್ಲಿ ಇದಕ್ಕೆ ತೊಂದರೆ ಆಗುತ್ತಿದೆ ಎಂಬ ದೂರು ಕೇಳಿ ಬಂದಿದೆ. ಇದಕ್ಕೆ ನಿಮ್ಮ ಸಲಹೆ ನೀಡಿ ಎಂದು ಸಿಎಂ ಹೇಳಿದರು.

ಇಂದಿರಾ ಕ್ಯಾಂಟೀನ್:
ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜನವರಿ ಒಂದರಿಂದ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಒಟ್ಟು 247 ಕ್ಯಾಂಟೀನ್‍ಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಆದಷ್ಟು ಬೇಗ ಕ್ಯಾಂಟೀನ್ ಆರಂಭಿಸಿ ಎಂದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಶೇ. 95ರಷ್ಟನ್ನು ಸರ್ಕಾರ ಈಡೇರಿಸಿದೆ. ರೈತರು, ಬಡವರು, ಮಹಿಳೆಯರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗಾಗಿ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿಯೂ ಪರಿಣಾಮಕಾರಿಯಾಗಿ ಜಾರಿಗೊಳಿಸಿದೆ. ನೀವು ಆ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನ್ನಲ್ಲಿ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Comments are closed.