ರಾಷ್ಟ್ರೀಯ

ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ವಿಚಾರಣೆ: ಕರ್ನಾಟಕದಲ್ಲಿ ತ್ವರಿತ ನ್ಯಾಯಾಲಯ ಆರಂಭ

Pinterest LinkedIn Tumblr


ಹೊಸದಿಲ್ಲಿ: ಜನಪ್ರತಿನಿಧಿಗಳ ವಿರುದ್ಧ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಮುಂದಿನ ಮಾರ್ಚ್‌ 1ರ ವೇಳೆಗೆ ಇವು ಕಾರ್ಯಾರಂಭ ಮಾಡಲಿವೆ.

ಈ ಕುರಿತು ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಮತ್ತು ನ್ಯಾಯಮೂರ್ತಿ ನವೀನ್‌ ಸಿನ್ಹಾ ನೇತೃತ್ವದ ನ್ಯಾಯಪೀಠ, ಇಂಥ ಕ್ಷಿಪ್ರ ನ್ಯಾಯಾಲಯಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದು ತಿಳಿಸಿದೆ.

ಶಾಸಕರು, ಸಂಸದರ ಮೇಲಿನ ಕ್ರಿಮಿನಲ್‌ ಪ್ರಕರಣಗಳು ಬಹುಬೇಗ ಇತ್ಯರ್ಥಗೊಳ್ಳಬೇಕು. ಈ ನಿಟ್ಟಿನಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ನ್ಯಾಯಪೀಠ ತಿಳಿಸಿತ್ತು.

ಇದಕ್ಕೆ ಅಫಿಡವಿಟ್‌ ಸಲ್ಲಿಸಿದ್ದ ಕೇಂದ್ರ ಸರಕಾರ 12 ತ್ವರಿತ ನ್ಯಾಯಾಲಯಗಳನ್ನು ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿತ್ತು.

ಇದುವರೆಗೆ ಜನಪ್ರತಿನಿಧಿಗಳ ಮೇಲೆ 1,581 ಪ್ರಕರಣಗಳು ದಾಖಲಾಗಿದ್ದು, ಯಾವುವು ಇತ್ಯರ್ಥಗೊಂಡಿಲ್ಲ.

ಕರ್ನಾಟಕ, ಆಂಧ್ರಪ್ರದೇಶ, ಬಿಹಾರ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ತ್ವರಿತ ನ್ಯಾಯಾಲಯ ಆರಂಭವಾಗಲಿದೆ.

ಎರಡು ಪ್ರತ್ಯೇಕ ನ್ಯಾಯಾಲಯಗಳು ಸಂಸದರ ಮೇಲೆ ದಾಖಲಾಗಿರುವ 228 ಪ್ರಕರಣಗಳ ವಿಚಾರಣೆ ನಡೆಸಲಿದೆ.

Comments are closed.