ಹೊಸದಿಲ್ಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಲಭಿಸಿದೆ.
ಎಐಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಕಳೆದ ಒಂದು ವಾರದಿಂದ ಅಳೆದು ತೂಗಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಪಟ್ಟು ಹಿಡಿದ ಕಾರಣ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎರಡು ದಿನ ವಿಳಂಬವಾಗಿದೆ.
218 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ರಾತ್ರಿ ಬಿಡುಗಡೆ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.
ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ಅವರ ಪುತ್ರಿಗೆ ಜಯನಗರ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ಜೆಡಿಎಸ್ನಿಂದ ವಲಸೆ ಬಂದ ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ, ಬಾಲಕೃಷ್ಣಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ರಾಸಲೀಲೆ ಪ್ರಕರಣದಲ್ಲಿ ಸಿಲುಕಿದ್ದ ಎಚ್.ವೈ. ಮೇಟಿಗೂ ಟಿಕೆಟ್ ನೀಡಲಾಗಿದೆ.
ಕಿತ್ತೂರು, ಮೇಲುಕೋಟೆ, ಶಾಂತಿನಗರ, ನಾಗಠಾಣಾ, ರಾಯಚೂರು ಮತ್ತು ಸಿಂಧಗಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿಲ್ಲ.
ಉದ್ಯಮಿ ಪುತ್ರ ವಿದ್ವತ್ ಮೇಲೆ ನಳಪಾಡ್ ಹಲ್ಲೆ ನಡೆಸಿದ್ದರಿಂದ ತೀವ್ರ ಮುಜುಗರಕ್ಕೊಳಗಾಗಿದ್ದ ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಭವಿಷ್ಯ ಕೂಡ ಇನ್ನೂ ಅತಂತ್ರವಾಗಿದೆ. ಹಾಲಿ ಶಾಸಕರಾದರೂ ಹ್ಯಾರಿಸ್ಗೆ ಟಿಕೆಟ್ ಘೋಷಣೆಯಾಗಿಲ್ಲ.
ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದ ಅಶೋಕ್ ಖೇಣಿಗೂ ಟಿಕೆಟ್ ಘೋಷಿಸಲಾಗಿದೆ.
ಭಾರಿ ವಿವಾದಕ್ಕೆ ಕಾರಣವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಚರ್ಚೆ ನಡೆಸಿದ ನಂತರ ಬಿಡುಗಡೆ ಮಾಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Comments are closed.