ನವದೆಹಲಿ: ಇಂದು ( ಮೇ 19)ಸಂಜೆ ನಾಲ್ಕು ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಅಲ್ಲದೆ, ಬಹುಮತ ಸಾಬೀತು ಮಾಡುವ ಪ್ರಕ್ರಿಯೆ ನಡೆಯುವಾಗ ಸೂಕ್ತ ಭದ್ರತೆ ಕಲ್ಪಿಸಲು ಸಂಬಂಧಿತ ಡಿಜಿಪಿಗೆ ಆದೇಶಿಸುವುದಾಗಿಯೂ ನ್ಯಾಯಪೀಠ ತಿಳಿಸಿದೆ.
ಬಹುಮತ ಇಲ್ಲದ ಹೊರತಾಗಿಯೂ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಆಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಜೆಡಿಎಸ್-ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಸದನದಲ್ಲಿ ಬಹುಮತ ಸಾಬೀತು ಮಾಡುವುದೇ ಅಂತಿಮ ಮತ್ತು ಸೂಕ್ತ ಪರಿಹಾರ. ಬಹುಮತ ಸಾಬೀತು ಪಡಿಸುವ ಪ್ರಕ್ರಿಯೆಗೆ ಹೆಚ್ಚಿನ ಸಮಯಾವಕಾಶ ನೀಡಲು ಸಾಧ್ಯವಿಲ್ಲ. ಆದ್ದರಿಂದ ಶನಿವಾರ ಸಂಜೆ ನಾಲ್ಕು ಗಂಟೆಗೆ ಸದನದಲ್ಲಿ ಬಹುಮತ ಸಾಬೀತಾಗಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತು.
ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ ಅರ್ಜಿಯನ್ನು ಶುಕ್ರವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಕೈಗೆತ್ತಿಕೊಂಡಿತು. ವಿಚಾರಣೆ ಆರಂಭವಾಗುತ್ತಲೆ, ಬಿಜೆಪಿ ಪರ ವಕೀಲ ಮುಕುಲ್ ರೋಹಟ್ಗಿ ಬಿಜೆಪಿ ನಾಯಕರ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅಲ್ಲದೆ, ತನ್ನ ಶಾಸಕಾಂಗ ಪಕ್ಷದ ನಾಯಕನಾಗಿ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರನ್ನು ನೇಮಿಸಿದೆ. ಜತೆಗೆ, ಸದನದಲ್ಲಿ ಬಹುಮತ ಸಾಬೀತು ಮಾಡಲು ಬಿಜೆಪಿ ಸಿದ್ಧ ಎಂದು ತಿಳಿಸಿದರು.
Comments are closed.