ನವದೆಹಲಿ: ಜೆಟ್ ಏರ್ವೇಸ್ ವಿಮಾನ ಸಿಬ್ಬಂದಿಯ ಅಚಾತುರ್ಯದಿಂದಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದವರ ಕಿವಿ, ಮೂಗಿನಲ್ಲಿ ರಕ್ತ ಬಂದ ಘಟನೆ ಗುರುವಾರ ನಡೆದಿದೆ.
#WATCH: Inside visuals of Jet Airways Mumbai-Jaipur flight that was turned back to Mumbai airport midway today after a loss in cabin pressure (Source: Mobile visuals) pic.twitter.com/SEktwy3kvw
— ANI (@ANI) September 20, 2018
ಜೈಪುರಕ್ಕೆ ಹಾರಾಟ ನಡೆಸಿದ್ದ ಜೆಟ್ ಏರ್ ವೇಸ್ ವಿಮಾನದಲ್ಲಿ ಆದ ದುರ್ಘಟನೆಗೆ ತುರ್ತು ಸ್ಪಂದಿಸಿರುವ ನಾಗರಿಕ ವಿಮಾನಯಾನ ಸಚಿವಾಲಯ, ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶಕರಿಗೆ ಮನವಿ ಮಾಡಿದೆ.
ವಿಮಾನದಲ್ಲಿದ್ದ ಸಿಬ್ಬಂದಿಗೆ ಮತ್ತೆ ಕರ್ತವ್ಯ ವಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಘಟನೆಯೇನು?
ಇಂದು ಬೆಳಗ್ಗೆ ಮುಂಬೈಯಿಂದ ಜೈಪುರಕ್ಕೆ ಜೆಟ್ ಏರ್ ವೇಸ್ ವಿಮಾನ ಹಾರಾಟ ಆರಂಭಿಸಿತ್ತು. ಹಲವು ಪ್ರಯಾಣಿಕರು ಅದರಲ್ಲಿದ್ದರು. ವಿಮಾನದ ಸಿಬ್ಬಂದಿ ಹಾರಾಟದ ಆರಂಭದಲ್ಲಿ ಕ್ಯಾಬಿನ್ ಒತ್ತಡ ಸಮಸ್ಯೆಯನ್ನು ನಿಯಂತ್ರಿಸದೆ ಇದ್ದ ಕಾರಣ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಒತ್ತಡವನ್ನು ತಡೆಯಲಾಗದೆ ತಲೆನೋವು ಕಾಣಿಸಿಕೊಂಡಿತು, ಮೂಗು ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಲು ಆರಂಭವಾಯಿತು.
ವಿಮಾನ ಮೇಲೆ ಹಾರುತ್ತಿದ್ದಾಗ ಸಿಬ್ಬಂದಿ ಬ್ಲೀಡ್ ಸ್ವಿಚ್ ಆಯ್ಕೆ ಮಾಡಲು ಮರೆತಿದ್ದರಿಂದ ಕ್ಯಾಬಿನ್ ನ ಒತ್ತಡವನ್ನು ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಪ್ರಯಾಣಿಕರಿಗೆ ಆಕ್ಸಿಜನ್ ಮುಖವಾಡ ನೀಡಲಾಯಿತು ಎಂದು ವಿಮಾನಯಾನ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಘಟನೆ ಬಗ್ಗೆ ವಿವರಿಸಿದ್ದಾರೆ.
9 ಡಬ್ಲ್ಯು 697 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಒಟ್ಟು 166 ಮಂದಿ ಪ್ರಯಾಣಿಕರು ಮತ್ತು 5 ಸಿಬ್ಬಂದಿಯಿದ್ದರು. ಪ್ರಯಾಣಿಕರು ಅಸ್ವಸ್ಥರಾಗುತ್ತಿದ್ದಂತೆ 45 ನಿಮಿಷದ ಹಾರಾಟದ ಬಳಿಕ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಾಪಾಸ್ ಇಳಿಸಲಾಗಿದ್ದು, ಸದ್ಯ ಅಸ್ವಸ್ಥಗೊಂಡಿರುವ ಪ್ರಯಾಣಿಕರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ವಿಮಾನದೊಳಗೆ ಒತ್ತಡ ನಿಯಂತ್ರಿಸುವ ಸ್ವಿಚ್ ಹಾಕಲು ಸಿಬ್ಬಂದಿ ಮರೆತ ಕಾರಣ ಈ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ಹೀಗೆ ಆಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಕುರಿತು ಎಎಐಬಿ ತನಿಖೆಗೆ ಆದೇಶಿಸಿದ್ದು, ಡಿಜಿಸಿಎಗೆ ದೂರನ್ನೂ ನೀಡಲಾಗಿದೆ.
Comments are closed.