ಛತ್ತೀಸ್ಗಢ: ಛತ್ತೀಸ್ಗಢದ ಮುಖ್ಯಮಂತ್ರಿ ರಮಣ ಸಿಂಗ್ ತಮಗಿಂತ 20 ವರ್ಷ ಕಿರಿಯರಾದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜನಂದ್ಗಾಂವ್ ಕ್ಷೇತ್ರದಿಂದ ರಮಣ ಸಿಂಗ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಯೋಗಿ ಆದಿತ್ಯನಾಥ ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.
ಕೇವಲ ವಯಸ್ಸಿನಲ್ಲಿ ಮಾತ್ರವಲ್ಲ… ರಾಜಕೀಯದಲ್ಲೂ ರಮಣ ಸಿಂಗ್ ಯೋಗಿ ಆದಿತ್ಯನಾಥ ಅವರಿಗಿಂತಲೂ ಸಾಕಷ್ಟು ಅನುಭವಸ್ಥರು. ಅತ್ಯಂತ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ನಾಲ್ಕನೇ ರಾಜಕಾರಣಿ ಎಂಬ ಹೆಗ್ಗಳಿಕೆಯೂ ಅವರಿಗಿದೆ. ಇದೇ ಮೊದಲ ಬಾರಿ ರಾಜಕಾರಣಕ್ಕಿಳಿದು ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ ಅವರ ಅನುಭವ ರಮಣ ಸಿಂಗ್ ಅವರ ಅನುಭವದ ಮುಂದೆ ಏನೂ ಅಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.1970ರಲ್ಲೇ ಬಿಜೆಪಿ ಸೇರಿದ ರಮಣ ಸಿಂಗ್ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ರಾಜನಂದಗಾಂವ್ನಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಮಣ ಸಿಂಗ್ ಈ ಬಾರಿ ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಕಾಂಗ್ರೆಸ್ನಿಂದ ಈ ಕ್ಷೇತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ ಕರುಣ ಶುಕ್ಲ ಸ್ಪರ್ಧಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದರಿಂದ ಬಿಜೆಪಿ, ಕಾಂಗ್ರೆಸ್, ಮತ್ತಿತರ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
Comments are closed.