
ಭೋಪಾಲ್: ಪಂಚ ರಾಜ್ಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಂತಿದ್ದ ಮಧ್ಯಪ್ರದೇಶದಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವನ್ನು ಮಣಿಸಿದೆ.
ಇಂದು ಸೋಮವಾರ ಭೋಪಾಲ್ನಲ್ಲಿ ಕಾಂಗ್ರೆಸ್ ಪಕ್ಷದ ಕಮಲನಾಥ್ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಸದ್ಯ ಈ ಕಾರ್ಯಕ್ರಮದ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೈ ಮುಖಂಡ ಕಮಲನಾಥ್ ಹಾಗೂ ಯುವ ನಾಯಕ ಜೋತಿರಾಧಿತ್ಯ ಸಿಂಧಿಯಾರೊಂದಿಗೆ, ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂಭ್ರಮಿಸುತ್ತಿರುವುದು ಕಂಡು ಬಂದಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಬದ್ಧವೈರಿಗಳಂತಿವೆ. ಅದರಲ್ಲೂ ಮಧ್ಯಪ್ರದೇಶದಲ್ಲಿ ಸಿಕ್ಕ ಸೋಲು ಬಿಜೆಪಿ ನಾಯಕರಿಗೆ ಬಹಳಷ್ಟು ಹಿನ್ನಡೆಯುಂಟು ಮಾಡಿತ್ತು. ಹೀಗಿರುವಾಗ ಕಾಂಗ್ರೆಸ್ ನಾಯಕರ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಸಿಎಂ ಕಾಂಗ್ರೆಸ್ ನಾಯಕರ ಸಂಭ್ರಮದಲ್ಲಿ ಪಾಲ್ಗೊಳ್ಳುವುದರೊಂದಿಗೆ, ಸಂಭ್ರಮಿಸಿರುವುದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ತಮ್ಮನ್ನು ಸೋಲಿಸಿದರೂ, ಇದಾವುದನ್ನೂ ಮನಸ್ಸಿನಲ್ಲಿಟ್ಟುಕೊಳ್ಳದೆ ಓರ್ವ ಸಾಮಾನ್ಯ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿವರಾಜ್ ಚೌಹಾಣ್ ನಡೆಯನ್ನು ಹಲವರು ಶ್ಲಾಘಿಸಿದ್ದಾರೆ. ಕೈ ಮುಖಂಡರೂ ಗೌರವ ವ್ಯಕ್ತಪಡಿಸಿದ್ದಾರೆ.
Comments are closed.