ರಾಷ್ಟ್ರೀಯ

ಉತ್ತರಪ್ರದೇಶದ ಘಾಜಿಪುರ ಪೊಲೀಸ್ ಪೇದೆ ಸಾವು ಪ್ರಕರಣ: 90 ಮಂದಿ ವಿರುದ್ಧ ಎಫ್ಐಆರ್ ದಾಖಲು, 19 ಮಂದಿ ಬಂಧನ

Pinterest LinkedIn Tumblr

ಲಖನೌ: ಉತ್ತರಪ್ರದೇಶದ ಘಾಜಿಪುರದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 90 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, 19 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಎಫ್ಐಆರ್ ನಲ್ಲಿ 32 ಮಂದಿ ಹೆಸರನ್ನು ನಮೂದಿಸಲಾಗಿದ್ದು, 60 ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ಆಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕೆಲವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಾಜಿಯಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಕರ್ತವ್ಯ ಪೂರ್ಣಗೊಳಿಸಿದ್ದ ಸುರೇಶ್ ವತ್ಸ್ ಅವರು, ವಾಪಸ್ಸಾಗುತ್ತಿದ್ದರು. ಈ ವೇಳೆ ನಿಶಾದ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಿಶಾದ್ ಪಕ್ಷದ ಕಾರ್ಯಕರ್ತರು, ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಪರಿಣಾಮ ಕೆಲವೆಡೆ ಸಂಚಾರ ದಟ್ಟಣೆ ಎದುರಾಗಿತ್ತು. ಹೀಗಾಗಿ ಸ್ಥಳಕ್ಕೆ ಧಾವಿಸಿದ್ದ ಸುರೇಶ್ ಅವರು, ಪ್ರತಿಭಟನಾ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ. ಇದರಿಂದ ಉದ್ರಿಕ್ರತಾದ ಪ್ರತಿಭಟನಾ ನಿರತರು, ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸುರೇಶ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ವರದಿಗಳು ತಿಳಿಸಿವೆ.

Comments are closed.