ರಾಷ್ಟ್ರೀಯ

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ತ್ರಿವಳಿ ತಲಾಖ್ ಮಸೂದೆ: ರಾಜ್ಯಸಭೆಯಲ್ಲಿ ನಾಳೆಗೆ ಮುಂದೂಡಿಕೆ

Pinterest LinkedIn Tumblr


ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಕೇಂದ್ರ ಸರಕಾರದ ತ್ರಿವಳಿ ತಲಾಖೆ ಮಸೂದೆಗೆ ರಾಜ್ಯಸಭೆಯಲ್ಲಿ ಇನ್ನೂ ಮುಕ್ತಿ ಸಿಕ್ಕಿಲ್ಲ. ರಾಜ್ಯಸಭೆಯಲ್ಲಿ ಮಸೂದೆ ಮಂಡಿಸುವ ಪ್ರಯತ್ನಕ್ಕೆ ರಾಜ್ಯಸಭೆಯಲ್ಲಿ ವಿಪಕ್ಷಗಳು ಒಟ್ಟುಗೂಡಿ ತಣ್ಣೀರೆರಚಲು ನಿರ್ಧರಿಸಿವೆ.

ಕಾಂಗ್ರೆಸ್​, ಸಮಾಜವಾದಿ ಹಾಗೂ ಟಿಆರ್​ಎಸ್​ ಪಕ್ಷಗಳು ಇಂದು ಸೋಮವಾರ ಮಸೂದೆಯನ್ನು ಸಂಸತ್ತಿನ ಜಂಟಿ ಆಯ್ಕೆ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸುವ ನಿಲುವಳಿ ಕೈಗೊಂಡವು. ವಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿತು. ಇದರೊಂದಿಗೆ ರಾಜ್ಯಸಭೆಯ ಕಲಾಪವನ್ನು ಜನವರಿ 2ಕ್ಕೆ ಮುಂದೂಡಲಾಗಿದೆ.

ತ್ರಿವಳಿ ತಲಾಖ್ ಮಸೂದೆಗೆ ಕೆಲವು ತಿದ್ದುಪಡಿ ತರಬೇಕು. ಈಗ ಇರುವ ಸ್ಥಿತಿಯಲ್ಲಿಯೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಕಳೆದ ಗುರುವಾರ ತ್ರಿವಳಿ ತಲಾಕ್‌ ಮಸೂದೆಯನ್ನು ಕಾನೂನು ಸಚಿವ ರವಿಶಂಕರ್ ಲೋಕಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ತ್ರಿವಳಿ ತಲಾಕ್‌ ಮಸೂದೆಯನ್ನು ಸಂಸತ್ತಿನ ಜಂಟಿ ಆಯ್ಕೆ ಸಮಿತಿಗೆ ಒಪ್ಪಿಸಬೇಕೆಂದು ವಿರೋಧ ಪಕ್ಷಗಳು ಆಗ್ರಹಿಸಿದವು. ವಿಪಕ್ಷಗಳ ವಿರೋಧದ ನಡುವೆಯೂ ವಿಧೇಯಕವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್​​ ಮಸೂದೆಗೆ ಅನುಮೋದನೆ ಸಿಗಬೇಕಿದೆ.

ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಂಡ ನಂತರ ಈ ಬಗ್ಗೆ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ರವಿಶಂಕರ್​​ ಪ್ರಸಾದ್​ ಅವರು, ಮುಸ್ಲಿಂ ಸಮುದಾಯದ ಮಹಿಳೆಯರ ಮೇಲೆ ಅಪರಾಧ ಎಸಗುವ ಪುರುಷನನ್ನು ದಂಡಿಸಬೇಕು. ಇದಕ್ಕೆ ಕಾನೂನಿನಲ್ಲಿ ಅವಕಾಶ ನೀಡಬೇಕು. ಹಾಗೆಯೇ ಮುಸ್ಲಿಂ ಸಮುದಾಯದ ಮಹಿಳಾ ಸಬಲೀಕರಣ ಆಗಬೇಕಿದೆ. ಈ ಕಾರಣದಿಂದಾಗಿ ನಾವು ಈ ಮಸೂದೆ ಮಾಡಲು ಹೊರಟಿದ್ದೇವೆ ಹೊರತು, ಯಾವುದೇ ರಾಜಕೀಯ ಉದ್ದೇಶದಿಂದಲ್ಲ ಎಂದು ಹೇಳಿದರು.

ತ್ರಿವಳಿ ತಲಾಖೆ ಮಸೂದೆಯಲ್ಲಿ ಕೆಲವು ಅಂಶಗಳು ಅಸಾಂವಿಧಾನಿಕವಾಗಿವೆ. ಈ ಕರಡು ಕಾನೂನನ್ನು ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ. ಹೀಗಾಗಿ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ (ತ್ರಿವಳಿ ತಲಾಕ್‌ ಮಸೂದೆ) ಯನ್ನು ಎರಡೂ ಸದನಗಳ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖಿಸಬೇಕು. ಇದರಲ್ಲಿ ಒಳಗೊಂಡಿರುವ ಅಸಾಂವಿಧಾನಿಕ ಅಂಶಗಳನ್ನು ಮತ್ತೊಮ್ಮೆ ಅವಲೋಕಿಸಬೇಕೆಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದರು.

Comments are closed.