ನವದೆಹಲಿ: ಉತ್ತರಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದರಿಂದ ಬಿಜೆಪಿ ಮತ್ತು ಕಾಂಗ್ರೆಸ್ಗೆ ಭಾರೀ ಹೊಡೆತವುಂಟಾಗಿದೆ. ಇದೀಗ, ರಾಹುಲ್ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ 80 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಮಾಯಾವತಿ ಮತ್ತು ಅಖಿಲೇಶ್ ಯಾದವ್ ನಿನ್ನೆ ಸುದ್ದಿಗೋಷ್ಠಿ ನಡೆಸಿ ಈ ಬಾರಿಯ ಚುನಾವಣೆಯಲ್ಲಿ ಎಸ್ಪಿ ಹಾಗೂ ಬಿಎಸ್ಪಿ ಒಂದಾಗಿ ಸ್ಪರ್ಧೆಗಳಿಯಲಿದೆ. ಚುನಾವಣೆಯಲ್ಲಿ ಜಯಭೇರಿ ಬಾರಿಸುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವುದೇ ಇದರ ಹಿಂದಿನ ಉದ್ದೇಶ ಎಂದಿದ್ದರು. ಕಾಂಗ್ರೆಸ್ನೊಂದಿಗೆ ಮಹಾಮೈತ್ರಿ ಮಾಡಿಕೊಳ್ಳಲು ಮೊದಲು ಒಪ್ಪಿಗೆ ಸೂಚಿಸಿದ್ದ ಈ ಎರಡು ಪಕ್ಷಗಳ ನಾಯಕರು ನಂತರ ಭಿನ್ನಾಭಿಪ್ರಾಯಗಳ ಕಾರಣದಿಂದ ಹೊರಬಂದಿದ್ದರು.
ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವವರು ಯಾರು ಎಂಬುದಕ್ಕೆ ನಿರ್ಣಾಯಕ ಸ್ಥಾನ ವಹಿಸಲಿದೆ ಎಂದೇ ಹೇಳಲಾಗುವ ಅತಿಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈ ಬಾರಿ ಏಕಾಂಗಿ ಹೋರಾಟ ನಡೆಸಲಿದೆ. ಇದಕ್ಕಾಗಿ ಫೆಬ್ರವರಿಯಲ್ಲಿ 13 ರ್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಉತ್ತರಪ್ರದೇಶದ ಜನರಿಗಾಗಿ ಹಲವು ಯೋಜನೆಗಳನ್ನು ತರಲು ಯೋಚಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮತ್ತು ಉತ್ತರಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಾಜ್ ಬಹದ್ದೂರ್ ಅವರೊಂದಿಗೆ ಮಾತುಕತೆ ನಡೆಸಿ ಯೋಜನೆ ಅಂತಿಮಗೊಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎದುರಾಳಿಗಳು ಎಂಬ ವಿಷಯ ಹೊಸದೇನಲ್ಲ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಯಾವೆಲ್ಲ ಪಕ್ಷಗಳು ಕೈಜೋಡಿಸುತ್ತವೆಯೋ ಅವುಗಳಿಗೆ ನಮ್ಮ ಪಕ್ಷದೊಳಗೆ ಸದಾ ಸ್ವಾಗತವಿದೆ ಎಂದಿದ್ದಾರೆ.
ಬಿಎಸ್ಪಿ ನಾಯಕಿ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖಿಲೇಶ್ ಯಾದವ್ ಅವರಿಗೆ ತಮಗೆ ಸರಿ ಎನಿಸಿದ್ದನ್ನು ಮಾಡಲು ಪೂರ್ತಿ ಸ್ವಾತಂತ್ರ್ಯವಿದೆ. ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾವು ಗೌರವಿಸುತ್ತೇವೆ. ಆದರೆ, ಈ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅವರು ಕಾಂಗ್ರೆಸ್ ಪಕ್ಷವನ್ನು ಕಡೆಗಣಿಸಿದ್ದಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
Comments are closed.