ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ (ಉತ್ತರ ಪ್ರದೇಶ ಪೂರ್ವ) ನೇಮಕಗೊಂಡಿರುವ ಗಾಂಧಿ ಕುಡಿ ಪ್ರಿಯಾಂಕಾ ವಾದ್ರಾ ಅವರು ಫೆ.4ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೂ ಮೊದಲು ಕುಂಭಮೇಳದಲ್ಲಿ ಅವರು ಪಾಲ್ಗೊಳ್ಳಲಿದ್ದು, ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರಂತೆ.
ಕುಂಭ ಮೇಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಪಾಲ್ಗೊಳ್ಳಲಿದ್ದಾರೆ. ಅವರು ಇತ್ತೀಚೆಗೆ ದೇವಾಲಯಕ್ಕೆ ಹೆಚ್ಚೆಚ್ಚು ಭೇಟಿ ನೀಡುತ್ತಿದ್ದಾರೆ. ಈ ಬಗ್ಗೆ ರಾಹುಲ್ ಟೀಕೆಗೆ ಗುರಿಯಾಗಿದ್ದು, ಮತ ಗಳಿಕೆಗೆ ಈ ತಂತ್ರ ಉಪಯೋಗಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಾರಿ ರಾಹುಲ್ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಮತ್ತೆ ಟೀಕೆಗಳು ವ್ಯಕ್ತವಾಗುವ ಸಾಧ್ಯತೆ ಇದೆ.
ಫೆ.4ರಂದು ಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳುವ ಪ್ರಿಯಾಂಕಾ ಪುಣ್ಯಸ್ನಾನ ಮಾಡಲಿದ್ದಾರಂತೆ. ನಂತರ ಲಖನೌನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಿದ್ದು, ಇದರಲ್ಲಿ ರಾಹುಲ್ ಕೂಡ ಪಾಲ್ಗೊಳ್ಳಲಿದ್ದಾರೆ. ಫೆ.4ರಂದು ಇದು ಸಾಧ್ಯವಾಗದ ಪಕ್ಷದಲ್ಲಿ ಫೆ.10ರಂದು ಈ ಕಾರ್ಯಕ್ರಮ ನೆರವೇರಲಿದೆ.
ಇನ್ನು, ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಇಬ್ಬರು ಒಟ್ಟಿಗೇ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಮೊದಲು 2001 ರಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂದಿ ಅವರು ಸಂಗಮದಲ್ಲಿ ಸ್ನಾನ ಮಾಡಿದ್ದರು. ಈಗ ಹಿಂದುಗಳ ಮತ ಗಳಿಕೆ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಇದಕ್ಕಾಗಿ, ಪ್ರಿಯಾಂಕಾ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರಪ್ರದೇಶದಲ್ಲಿ ಎಸ್ಪಿ ಹಾಗೂ ಬಿಎಸ್ಪಿ ಮೈತ್ರಿ ಮಾಡಿಕೊಂಡಿವೆ. ಈ ಮೈತ್ರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೊರಗಿಟ್ಟಿರುವುದರಿಂದ ಒಂಟಿಯಾಗಿ ಸ್ಪರ್ಧೆಗೆ ಇಳಿಯುವ ಪರಿಸ್ಥಿತಿ ಬಂದೊದಗಿದೆ. ಉತ್ತರ ಪ್ರದೇಶದ ಎಲ್ಲಾ 80 ಸ್ಥಾನಗಳಲ್ಲೂ ಸ್ಪರ್ಧಿಸುತ್ತೇನೆಂದಿರುವ ಕೈಪಾಳಯ ಇಲ್ಲಿ ಮಿಷನ್-30 ಗುರಿ ಇಟ್ಟುಕೊಂಡಿದೆ. ಅಂದರೆ ಉತ್ತರ ಪ್ರದೇಶದಲ್ಲಿ 30 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಎಸ್ಪಿ-ಬಿಎಸ್ಪಿ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಕಾಂಗ್ರೆಸ್ ನಿರ್ಧರಿಸಿದೆ.
Comments are closed.