ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರು ಇಂದು ಭಾರತಕ್ಕೆ ಮರಳುತ್ತಿದ್ದಾರೆ. ಅವರ ಪೋಷಕರು ಮಗನನ್ನು ಸ್ವಾಗತಿಸಲು ವಾಘಾ ಗಡಿ ಭಾಗಕ್ಕೆ ತೆರಳುತ್ತಿದ್ದಾರೆ. ನಿನ್ನೆ ರಾತ್ರಿ ವಿಮಾನ ಏರಿದ ಅಭಿನಂದನ್ ಪಾಲಕರಿಗೆ ಸಹ ಪ್ರಯಾಣಿಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸೂಚಿಸಿದ್ದಾರೆ.
ಅಭಿನಂದನ್ ಪಾಲಕರು ನಿನ್ನೆ ರಾತ್ರಿ ದೆಹಲಿಗೆ ತೆರಳಿದ್ದಾರೆ. ಅಭಿನಂದನ್ ತಂದೆ-ತಾಯಿ ಇಬ್ಬರೂ ವಿಮಾನ ಏರುತ್ತಿದ್ದಂತೆ, ಎಲ್ಲರೂ ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಸ್ವಾಗತಿಸಿದರು. ಇದಕ್ಕೆ ಅಭಿನಂದನ್ ತಂದೆ-ತಾಯಿ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರು ಈ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಶೇರ್ ಆಗುತ್ತಿದೆ.
ಬುಧವಾರ ಬೆಳಗ್ಗೆ ಪಾಕಿಸ್ತಾನದ ಜೆಟ್ ಎಫ್-16 ಯುದ್ಧವಿಮಾನ ಭಾರತ ವಾಯು ವಲಯ ಗಡಿಯನ್ನು ದಾಟಿದಾಗ ಭಾರತದ ಮಿಗ್-21 ವಿಮಾನವು ಅದನ್ನು ಹಿಮ್ಮೆಟ್ಟಿಸಿತ್ತು. ಈ ವೇಳೆ ಮಿಗ್-21 ವಿಮಾನ ಪತನಗೊಂಡಿತ್ತು. ವಿಮಾನದಿಂದ ಪ್ಯಾರಾಚೂಟ್ ಮೂಲಕ ಕೆಳಗಿಳಿದ ಅಭಿನಂದನ್ ಅವರನ್ನು ಪಾಕಿಸ್ತಾನ ಸೈನಿಕರು ಬಂಧಿಸಿದ್ದರು.
ಅಭಿನಂದನ್ ಅವರ ಬಂಧನದ ನಂತರ ಎರಡು ದೇಶಗಳ ನಡುವಿನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿತ್ತು. ಅಭಿನಂದನ್ ಅವರನ್ನು ಸುರಕ್ಷಿತವಾಗಿ ಮತ್ತು ಆದಷ್ಟು ಬೇಗ ಭಾರತಕ್ಕೆ ವಾಪಸ್ ಕಳುಹಿಸುವಂತೆ ಭಾರತ ಪಾಕಿಸ್ತಾನಕ್ಕೆ ಆಗ್ರಹಿಸಿತ್ತು. ಈ ಸಂಬಂಧ ನೆನ್ನೆ ಪಾಕ್ ಹೈ ಕಮಿಷನರ್ ಅವರಿಗೆ ಸಮನ್ಸ್ ಜಾರಿಯಾಗಿದೆ.
ಎರಡು ದೇಶಗಳ ನಡುವೆ ಶಾಂತಿ ಸಂಕೇತವಾಗಿ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಹೇಳಿದ್ದರು. ಅಂತೆಯೇ ಅವರನ್ನು ಪಾಕಿಸ್ತಾನ ಇಂದು ಭಾರತಕ್ಕೆ ಹಸ್ತಾಂತರ ಮಾಡಲಿದೆ.
Comments are closed.