ರಾಷ್ಟ್ರೀಯ

ಆರ್ಟಿಕಲ್ 370 ರದ್ದು; ಜಮ್ಮು-ಕಾಶ್ಮೀರದಲ್ಲಿ ಕಾನೂನು, ಸುವ್ಯಸ್ಥೆಯ ತೊಂದರೆಯಾಗದಂತೆ ಹೆಚ್ಚುವರಿ 8 ಸಾವಿರ ಸೈನಿಕರ ರವಾನೆ

Pinterest LinkedIn Tumblr

ಶ್ರೀನಗರ: ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯಸ್ಥೆಯ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕಣಿವೆ ರಾಜ್ಯಕ್ಕೆ 8 ಸಾವಿರ ಸೈನಿಕರನ್ನು ರವಾನೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ಆತಂಕದ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಮತ್ತು ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜಾದ್ ಲೋನೆ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

ಉತ್ತರ ಪ್ರದೇಶ, ಒಡಿಶಾ, ಅಸ್ಸಾಂ ಸೇರಿದಂತೆ ದೇಶದ ವಿವಿಧ ಭಾಗಗಳಿಂದ 8000ಕ್ಕೂ ಹೆಚ್ಚು ಪ್ಯಾರಾ ಮಿಲಿಟರಿ ಸಿಬ್ಬಂದಿಯನ್ನು ಕಾಶ್ಮೀರ ಕಣಿವೆಗೆ ಕೇಂದ್ರ ಸರ್ಕಾರ ರವಾನಿಸಿದೆ. ಇನ್ನಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ವಿಶೇಷ ವಿಮಾನಗಳ ಮೂಲಕ ಸೈನಿಕರನ್ನು ಕಣಿವೆರಾಜ್ಯಕ್ಕೆ ರವಾನೆ ಮಾಡಲಾಗುತ್ತಿದೆ. ಅಂತೆಯೇ ಕಣಿವೆ ರಾಜ್ಯದಲ್ಲಿ ಸೇನಾ ಪಡೆಗಳ ನಿಯೋಜನೆ ಹೆಚ್ಚಾಗಿದ್ದು, ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇನ್ನು ಕೇಂದ್ರ ರೈಲ್ವೇ ಇಲಾಖೆ ಕೂಡ ಈ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಕಣಿವೆ ರಾಜ್ಯದಲ್ಲಿರುವ ಪ್ರವಾಸಿಗರು, ಯಾತ್ರಾರ್ಥಿಗಳ ರಕ್ಷಣೆಗೆ ಮುಂದಾಗಿದ್ದು, ಟಿಕೆಟ್ ಇಲ್ಲದೆಯೇ ರೈಲಿನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಲಡಾಖ್ ಸೇರಿದಂತೆ ಜಮ್ಮು ಕಾಶ್ಮೀರದಾದ್ಯಂತ ಸೇನಾಪಡೆಗಳು ಹೈಅಲರ್ಟ್ ಘೋಷಣೆ ಮಾಡಿದ್ದು, ಯಾವುದೇ ರೀತಿಯ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ.

Comments are closed.