ರಾಷ್ಟ್ರೀಯ

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ನಡೆದು ಬಂದ ದಾರಿ ……!

Pinterest LinkedIn Tumblr

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಶನಿವಾರ, ಆಗಸ್ಟ್ 24, 2019ರಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ 2 ವರ್ಷದಿಂದ ಅವರು ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆರಂಭಿಕ ಹಂತದಲ್ಲಿದ್ದ ಕ್ಯಾನ್ಸರ್‌ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು. ಕೀಮೋಥೆರಪಿ ಅವಶ್ಯಕತೆ ಇಲ್ಲ ಎನ್ನಲಾಗಿತ್ತು. 2018 ಮೇನಲ್ಲಿ ಅವರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.

ಆಗಸ್ಟ್‌ 9 ರಂದು ಉಸಿರಾಟದ ಸಮಸ್ಯೆಯಿಂದ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಏಮ್ಸ್‌ ಅವರ ಹೆಲ್ತ್‌ ಬುಲೆಟಿನ್‌ ಸಹ ನೀಡಿತ್ತು. ಆಗಸ್ಟ್‌ 16 ರಂದು ಜೇಟ್ಲಿ ಶ್ವಾಸಕೋಶದಲ್ಲಿ ನೀರು ತುಂಬಿ, ಅವರ ಸ್ಥಿತಿ ಚಿಂತಾಜನಕವಾಗಿತ್ತು.

1952ರ ಡಿಸೆಂಬರ್ 28 ರಂದು ಜನಿಸಿದ ಅರುಣ್‌ ಜೇಟ್ಲಿ, ರಾಷ್ಟ್ರ ರಾಜಧಾನಿಯಲ್ಲೇ ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು. ಕ್ಸೇವಿಯರ್‌ ಸ್ಕೂಲ್‌ನಲ್ಲಿ ಶಿಕ್ಷಣ ಮುಗಿಸಿದ್ದ ಅವರು, ಶ್ರೀರಾಮ ಕಾಲೇಜ್‌ ಆಫ್‌ ಕಾಮರ್ಸ್‌ನಿಂದ ವಾಣಿಜ್ಯ ಪದವಿ ಪಡೆದಿದ್ದರು. ದಿಲ್ಲಿ ವಿಶ್ವವಿದ್ಯಾಲಯದಿಂದ ಫ್ಯಾಕಲ್ಟಿ ಆಫ್‌ ಲಾ ಪದವಿ ಪಡೆದುಕೊಂಡಿದ್ದರು. ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಆಗಿದ್ದರು.

1991ರಿಂದ ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು, ಪ್ರಧಾನಿ ಮೋದಿ ನೇತೃತ್ವದ ಮೊದಲ ಅವಧಿಯ ಸರಕಾರದಲ್ಲಿ ಹಣಕಾಸು ಇಲಾಖೆಯನ್ನು ನಿರ್ವಹಿಸಿದ್ದರು. ಅಂತೆಯೇ 1999ರಲ್ಲಿ ವಾಜಪೇಯಿ ಸರಕಾರದಲ್ಲಿ ಅವರು ಮಾಹಿತಿ ಹಾಗೂ ಪ್ರಸಾರ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಂತೆಯೇ ದೇಶದಲ್ಲಿ ಏಕರೂಪ ತೆರಿಗೆ ವ್ಯವಸ್ಥೆ, ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಜಾರಿ ವೇಳೆ ಪ್ರಮುಖ ಪಾತ್ರ ವಹಿಸಿದ್ದರು. ಹಣಕಾಸು ಇಲಾಖೆಯಡಿಯ ಆದಾಯ ಇಲಾಖೆ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ಬದಲಾವಣೆ ತರುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.

ರಾಜ್ಯಸಭೆಯ ಪ್ರತಿಪಕ್ಷ ನಾಯಕ
2006ರಿಂದ ರಾಜ್ಯಸಭೆ ಸದಸ್ಯರಾಗಿದ್ದ ಅರುಣ್‌ ಜೇಟ್ಲಿ ಅವರನ್ನು, ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ 2009ರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿದ್ದರು. ಅಂತೆಯೇ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಅರುಣ್‌ ಜೇಟ್ಲಿ ಕಾರ್ಯ ನಿರ್ವಹಿಸಿದ್ದರು. ಒಬ್ಬರು 2 ಹುದ್ದೆಗಳನ್ನು ನಿರ್ವಹಿಸಬಾರದೆಂಬ ಪಕ್ಷದ ನಿಯಮಕ್ಕೆ ಬದ್ಧರಾಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜ್ಯಸಭೆಯಲ್ಲಿ ಅಣ್ಣಾ ಹಜಾರೆ ಅವರ ಲೋಕಪಾಲ್‌ ಮಸೂದೆ, ಮಹಿಳಾ ಮೀಸಲಾತಿ ಮಸೂದೆಗೆ ಅವರು ಬೆಂಬಲ ನೀಡಿದ್ದರು.

ಚುನಾವಣೆಗಳಿಂದ ದೂರವೇ ಇದ್ದ ಜೇಟ್ಲಿ
ಕೇಂದ್ರದಲ್ಲಿ ವಾಜಪೇಯಿ ಸರಕಾರದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಜೇಟ್ಲಿ, 2014ರವರೆಗೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 2014ರಲ್ಲಿ ನವಜೋತ್‌ ಸಿಂಗ್‌ ಸಿಧು ಅವರ ಬದಲಿಗೆ ಅಮೃತ್‌ಸರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡಲಾಗಿತ್ತು. ಆದರೆ ಅವರು ಈ ಚುನಾವಣೆಯಲ್ಲಿ ಅಮರಿಂದರ್‌ ಸಿಂಗ್‌ ವಿರುದ್ಧ ಸೋಲು ಕಂಡಿದ್ದರು. ಗುಜರಾತ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರನ್ನು 2018 ಮಾರ್ಚ್‌ನಲ್ಲಿ ಉತ್ತರ ಪ್ರದೇಶದಿಂದ ಮರು ಆಯ್ಕೆ ಮಾಡಲಾಗಿತ್ತು.

Comments are closed.