ರಾಷ್ಟ್ರೀಯ

ಅಕ್ಟೋಬರ್ 18ರೊಳಗೆ ಅಯೋಧ್ಯೆ ವಿಚಾರಣೆ ಅಂತ್ಯ: ಗಡುವು ನೀಡಿದ ಸುಪ್ರೀಂ

Pinterest LinkedIn Tumblr

ನವದೆಹಲಿ: ಅಯೋಧ್ಯೆ ಭೂ ವಿವಾದ ಪ್ರಕರಣವನ್ನು ಆದಷ್ಟೂ ಬೇಗ ಇತ್ಯರ್ಥಪಡಿಸಲು ಸುಪ್ರೀಂ ಕೋರ್ಟ್ ಉತ್ಸುಕವಾಗಿದೆ. ಅಕ್ಟೋಬರ್ 18ರೊಳಗೆ ಎಲ್ಲಾ ವಿಚಾರಣೆಗಳನ್ನು ಮುಕ್ತಾಯಗೊಳಿಸಲು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಪ್ಪಣೆ ಮಾಡಿದ್ದಾರೆ. ಅದಕ್ಕಾಗಿ, ಪ್ರಕರಣ ಸಂಬಂಧಿತರೆಲ್ಲರೂ ಸಹಕಾರ ನೀಡಿ ವಿಚಾರಣೆ ಬೇಗ ಮುಗಿಯಲು ನೆರವಾಗಿ ಎಂದು ಗೊಗೋಯ್ ಒತ್ತಾಯಿಸಿದ್ದಾರೆ.

ಸಿಜೆಐ ರಂಜನ್ ಗೊಗೋಯ್ ಅವರ ನಿವೃತ್ತಿಗೆ ಇನ್ನೆರಡು ತಿಂಗಳಷ್ಟೇ ಬಾಕಿ ಇದೆ. ಅಷ್ಟರೊಳಗೆ ಅವರು ಈ ಪ್ರಕರಣವನ್ನು ಇತ್ಯರ್ಥಪಡಿಸಲು ಬಯಸಿದಂತಿದೆ. ಅದಕ್ಕಾಗಿ ನ್ಯಾಯಪೀಠವು ನಿಗದಿಗಿಂತ ಹೆಚ್ಚು ಸಮಯ ಹಾಗೂ ರಜೆಯ ದಿನಗಳಲ್ಲೂ ಕೆಲಸ ಮಾಡಲಿದೆಯಂತೆ.

ಮುಸ್ಲಿಮರ ಕಡೆಯವರು ಸೆ. 28ರೊಳಗೆ ತನ್ನ ವಾದ ಮಂಡನೆ ಮುಗಿಸುವುದಾಗಿ ತಿಳಿಸಿದ್ದಾರೆ. ಶ್ರೀರಾಮ ದೇವರ ಪರ ವಕೀಲರು ಎರಡು ದಿನದಲ್ಲಿ ಉತ್ತರ ರೂಪದಲ್ಲಿ ಪ್ರತಿವಾದ ಮಂಡನೆ ಮುಗಿಸಲು ಒಪ್ಪಿಕೊಂಡಿದ್ದಾರೆ. ಆ ಬಳಿಕ ಇನ್ನೂ ಮೂರು ದಿನಗಳ ಕಾಲ ಉಳಿದೆಲ್ಲಾ ವಾದ ಪ್ರತಿವಾದಗಳನ್ನು ನಡೆಸಲು ಯೋಜಿಸಲಾಗಿದೆ.

ಇದೇ ವೇಳೆ, ಮಾತುಕತೆ ಮೂಲಕ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಮಧ್ಯಸ್ಥಿಕೆ ಮಂಡಳಿ ಮಾಡಿಕೊಂಡ ಮನವಿಗೆ ಸುಪ್ರೀಂ ಕೋರ್ಟ್ ಪೂರಕವಾಗಿ ಸ್ಪಂದಿಸಿದೆ. “ಈ ವ್ಯಾಜ್ಯವನ್ನು ನಿಮ್ಮಲ್ಲೇ ಪರಿಹರಿಸಿಕೊಳ್ಳಲು ಇಚ್ಛಿಸಿದರೆ ಹಾಗೇ ಮಾಡಿ. ನಿಮ್ಮ ಪರಿಹಾರವನ್ನು ನ್ಯಾಯಾಲಯದ ಮುಂದೆ ಸಲ್ಲಿಸಿರಿ” ಎಂದು ಸುಪ್ರೀಂ ನ್ಯಾಯಪೀಠ ತಿಳಿಸಿದೆ.

ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಮೊದಲಾದವರು ಇರುವ ಮಧ್ಯಸ್ಥಿಕೆ ಮಂಡಳಿಯು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಮಾರ್ಚ್ ತಿಂಗಳಲ್ಲೇ ಮಾತುಕತೆಯ ಪ್ರಯತ್ನಗಳನ್ನ ನಡೆಸಿತ್ತು. ಆದರೆ, ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಯಾವ ಕಡೆಯವರೂ ಕೂಡ ಒಂದು ಒಮ್ಮತಕ್ಕೆ ಬರಲು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವೇ ಈ ಪ್ರಕರಣವನ್ನು ಕೈಗೆತ್ತಿಕೊಂಡು ಪ್ರತೀ ದಿನ ವಿಚಾರಣೆ ನಡೆಸಿ ಆದಷ್ಟೂ ಬೇಗ ಮುಗಿಸಲು ನಿರ್ಧರಿಸಿದೆ. ಅದರಂತೆ ಆ. 6ರಿಂದ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಈ ವಿಚಾರಣೆಗೆ ಇನ್ನಷ್ಟು ವೇಗ ತುಂಬಲು ನಿರ್ಧರಿಸಿರುವ ಸಿಜೆಐ ರಂಜನ್ ಗೊಗೋಯ್ ಅವರು ಅಕ್ಟೋಬರ್ 18ಕ್ಕೆ ಡೆಡ್​ಲೈನ್ ನಿಗದಿ ಮಾಡಿದ್ದಾರೆ.

ಅಯೋಧ್ಯೆಯ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. ಬಾಬ್ರಿ ಮಸೀದಿ ಕಟ್ಟುವ ಮುಂಚೆ ಈ ಜಾಗದಲ್ಲಿ ರಾಮನ ದೇವಸ್ಥಾನವಿತ್ತು ಎಂಬುದು ಹಿಂದೂಗಳ ವಾದವಾಗಿದೆ. ಬಾಬ್ರಿ ಮಸೀದಿ ಇಡೀ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದ. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳುತ್ತಿದೆ. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಪಕ್ಷಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸುತ್ತಿದೆ.

Comments are closed.