ನವದೆಹಲಿ: ಸೆಪ್ಟೆಂಬರ್ 5ರಿಂದ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಏಮ್ಸ್ ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿದೆ.
ತಿಹಾರ್ ಜೈಲಿನಲ್ಲಿರುವ ಆರೋಪಿಗಳಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಸಾಮಾನ್ಯವಾಗಿ ಅವರನ್ನು ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುತ್ತದೆ. ಚಿದಂಬರಂ ಪ್ರಕರಣದಲ್ಲೂ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಅವರನ್ನು ಏಮ್ಸ್ ಅಥವಾ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಬೇಕು ಎಂದು ನ್ಯಾಯಾಲಯ ಸೂಚನೆ ನೀಡಿತ್ತು. ಅದರಂತೆ ಇದೀಗ ಚಿದಂಬರಂ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಬುಧವಾರ ಸಿಬಿಐ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಎರಡು ವಾರಗಳ ಕಾಲ ವಿಸ್ತರಿಸಿತ್ತು. ಹೀಗಾಗಿ ಅವರು ಅಕ್ಟೋಬರ್ 17ರವರೆಗೂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ. ಚಿದಂಬರಂ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 15ಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ಮುಂದೆ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, 74 ವರ್ಷದ ಹಿರಿಯ ನಾಯಕರಾಗಿರುವ ಚಿದಂಬರಂ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಆಹಾರ ಅವರಿಗೆ ಒಗ್ಗಿಕೊಳ್ಳದ ಕಾರಣ ಅವರು ಈಗಾಗಲೇ 4 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ಚಿದಂಬರಂ ಪರ ವಕೀಲರು ಮನವಿ ಮಾಡಿದ್ದರು.
Comments are closed.