ರಾಷ್ಟ್ರೀಯ

ರಾಜ್ಯಕ್ಕೆ ದಿಲ್ಲಿಯಿಂದ ರೈಲುಗಳ ವ್ಯವಸ್ಥೆ, ದುಬೈನಿಂದ ವಿಮಾನಗಳ ವ್ಯವಸ್ಥೆ: ಡಿವಿ ಸದಾನಂದ ಗೌಡ

Pinterest LinkedIn Tumblr


ಹೊಸ ದಿಲ್ಲಿ: ಲಾಕ್‌ಡೌನ್‌ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಸಂಬಂಧ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ರೈಲ್ವೆ ಸಚಿವ ಪಿಯುಶ್‌ ಗೋಯಲ್‌ ಅವರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿರೋದಾಗಿ ಸದಾನಂದ ಗೌಡ ತಿಳಿಸಿದ್ದಾರೆ. ಒಂದೆರಡು ದಿನಗಳಲ್ಲಿ ದಿಲ್ಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ.

ದಿಲ್ಲಿ ಹೊರತುಪಡಿಸಿ ಹರಿಯಾಣ, ಪಂಜಾಬ್‌ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್‌ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದಾರೆ. ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ಹಾಗೆಯೇ ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಮಾನಗಳ ವ್ಯವಸ್ಥೆಯಾಗಿದೆ. ಇದೇ 12ನೇ ತಾರೀಖು ಯುಏಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ತಮಗೆ ಖಚಿತಪಡಿಸಿದ್ದಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಇನ್ನೂ ಪ್ರಕಟವಾಗಬೇಕಿದೆ ಎಂದು ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.

ದಿಲ್ಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನ ವ್ಯವಸ್ಥೆ ಮಾಡಿಕೊಂಡು ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದಿಲ್ಲಿ ವಾಸಿ ಕನ್ನಡಿಗರು ಹಾಗೂ ಯಾತ್ರಾರ್ಥಿಗಳಿಗೂ ಅಗತ್ಯ ಪರವಾನಿಗೆ ಕೊಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ, ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಿದ್ದಕ್ಕಾಗಿ ಅರಬ್ ದೇಶಗಳಲ್ಲಿರುವ ಕನ್ನಡಿಗರು ಸಚಿವ ಸದಾನಂದ ಗೌಡರಿಗೆ ಧನ್ಯವಾದ ಹೇಳಿದ್ದಾರೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಹಲವು ವಿಮಾನಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ದುಬೈನಿಂದ ಕರ್ನಾಟಕಕ್ಕೆ ಯಾವುದೇ ವಿಮಾನ ನಿಗದಿಯಾಗಿರಲಿಲ್ಲ. ಈ ವಿಚಾರವನ್ನು ಸದಾನಂದ ಗೌಡ ಅವರು ವಿದೇಶಾಂಗ ಸಚಿವರ ಜೊತೆ ಪ್ರಸ್ತಾಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Comments are closed.