ರಾಷ್ಟ್ರೀಯ

ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ; ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ ನಡೆಸುವ ಅಗತ್ಯವಿದೆ: ಕೇಂದ್ರ ಆರೋಗ್ಯ ಸಚಿವಾಲಯ

Pinterest LinkedIn Tumblr

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕರ್ನಾಟಕ ಸೇರಿ 10 ರಾಜ್ಯಗಳ 38 ಜಿಲ್ಲೆಗಳ 378 ಮಹಾನಗರಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಕೇಂದ್ರ ಸಚಿವಾಲಯವು ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಸೋಂಕು ಹರಡುವಿಕೆ ನಿಯಂತ್ರಣ ಮತ್ತು ಸಾವಿನ ಪ್ರಮಾಣ ಇಳಿಕೆಗೆ ಈ ಕ್ರಮಗಳು ಅತ್ಯಗತ್ಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಈ 38 ಮಹಾನಗರಗಳ ಪಾಲಿಕೆಗಳ ಆಯುಕ್ತರು, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ವೇಳೆ ಈ ಸೂಚನೆಗಳನ್ನು ನೀಡಿದ್ದಾರೆ.ಆದರೆ, ಕರ್ನಾಟಕದಲ್ಲಿ ಯಾವ ಯಾವ ನಗರಗಳು ಈ ಯೋಜನೆಗೆ ಒಳಪಡಲಿವೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಲಾಕ್’ಡೌನ್ ತೆರವಾದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಹೊಸ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಯೋಜನೆ ರೂಪಿಸಬೇಕು. ಮನೆಮನೆಗೆ ತೆರಳಿ ಆರೋಗ್ಯ ತಪಾಸಣೆ, ಉತ್ತಮ ಪರೀಕ್ಷೆ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಎಲ್ಲಾ ಹಂತದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸಬೇಕು. ಸೋಂಕಿತರು ಪತ್ತೆಯಾದ ಕೂಡಲೇ, ವಿಳಂಬ ಮಾಡದೇ ಅವರನ್ನು ಅಲ್ಲಿಂದ ತೆರವು ಮಾಡಬೇಕು. ಇದರಿಂದ ಸೋಂಕು ಹರಡುವಿಕೆಯನ್ನು ತಡೆಯಬಹುದು ಎಂದು ಸೂಚಿಸಿದ್ದಾರೆ.

ಸಾರ್ವಜನಿಕ ವ್ಯವಸ್ಥೆಗಳನ್ನು ಹೆಚ್ಚಾಗಿ ಬಳಸುವ ಹೆಚ್ಚಿನ ಜನಸಾಂದ್ರತೆ ಇರುವ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನವಹಿಸಬೇಕು ಎಂದು ಸೂಚಿಲಾಯಿತು. ಜೊತೆಗೆ ಸೋಂಕು ಹೆಚ್ಚಿರುವ ಕಂಟೈನ್ಮೆಂಟ್ ವಲಯ, ಬಫರ್ ವಲಯಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಜನರಿಗೆ ಸೋಂಕಿನ ಕುರಿತು ಅರಿವು ಮೂಡಿಸುವ ಚಟುವಟಿಕೆಗಳ ಬಗ್ಗೆಯೂ ರಾಜ್ಯಗಳಿಗೆ ಮಾಹಿತಿ ನೀಡಲಾಯಿತು.

Comments are closed.