ರಾಷ್ಟ್ರೀಯ

ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ, ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ, ಪೂರೈಕೆಗೆ ಕೇಂದ್ರ ಸಿದ್ಧ: ಮೋದಿ

Pinterest LinkedIn Tumblr

ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ.

ಕೋವಿಡ್-19 ಪರಿಸ್ಥಿತಿ ಕುರಿತು 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದ ಪ್ರಧಾನಿ, ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಒತ್ತಿ ಹೇಳಿದರು.

ಆಮ್ಲಜನಕ ದುರ್ಬಳಕೆ ಯಾಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಸಲಹೆ ನೀಡಿದ ಪ್ರಧಾನಿ, ಆಮ್ಲಜನಕದ ಟ್ಯಾಂಕರು ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು. ಆಮ್ಲಜನಕ ಮತ್ತು ರೆಮ್ ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆಯನ್ನು ನಿಯಂತ್ರಿಸಬೇಕು. ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೇ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕದ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ. 16 ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ. 50 ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್ ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ ಗಳಷ್ಟು ರೆಮ್ ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮನವಿ ಮಾಡಿದರು.ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಗಮನಕ್ಕೆ ತಂದರು.

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಮನವಿ ಮಾಡಿದ್ದಾರೆ.

Comments are closed.