ನ್ಯೂಯಾರ್ಕ್, ಸೆ.27: ಎಲ್ಲ ರಾಷ್ಟ್ರಗಳು ತಮ್ಮ ಕಾನೂನಿನಲ್ಲಿ ಮಕ್ಕಳಿಗೆ ಸಂಬಂಧಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಭಾರತೀಯ ಕೈಲಾಶ್ ಸತ್ಯಾರ್ಥಿ ಅಂತಾರಾಷ್ಟ್ರೀಯ ಮುಖಂಡರನ್ನು ಆಗ್ರಹಿಸಿದ್ದಾರೆ.
ಬಾಲ ಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳು ಮುಂದುವರಿದದ್ದೇ ಆದಲ್ಲಿ ಬಹುಪಾಲು ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ವೈಫಲ್ಯವನ್ನು ಎದುರಿಸಬೇಕಾದೀತು ಎಂದು ಅಂತಾರಾಷ್ಟ್ರೀಯ ಸಮುದಾಯವನ್ನು ಸತ್ಯಾರ್ಥಿ ಎಚ್ಚರಿಸಿದ್ದಾರೆ.
ನ್ಯೂಯಾರ್ಕ್ನಲ್ಲಿ ಏರ್ಪಡಿಸಲಾಗಿದ್ದ ಸುಸ್ಥಿರ ಅಭಿವೃದ್ಧಿ ಗುರಿ(ಎಸ್ಡಿಜಿ)ಗಳ ಕುರಿತ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಸತ್ಯಾರ್ಥಿಯವರು, ಮಕ್ಕಳಿಗೆ ಸಂಬಂಧಿಸಿದ ಅಭಿವೃದ್ಧಿ ಗುರಿಗಳಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಶಿಕ್ಷಣ, ಆರೋಗ್ಯ ಹಾಗೂ ಮಕ್ಕಳ ಸಂರಕ್ಷಣೆ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಯ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುಸ್ಥಿರ ಅಭಿವೃದ್ಧಿ ಗುರಿಗಳು ನಾಗರಿಕ ಸಂಸ್ಥೆಗಳು, ಧಾರ್ಮಿಕ ಸಂಘಟನೆಗಳು, ಸರಕಾರಗಳು ಹಾಗೂ ಉದ್ಯಮಗಳಿಗೆ ಮಕ್ಕಳ ಜೀತಪದ್ಧತಿಯನ್ನು ಹೋಗಲಾಡಿಸುವಲ್ಲಿ ಭಾಗಿದಾರಿಕೆ ವಹಿಸಲು ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದವರು ಅಭಿಪ್ರಾಯಿಸಿದ್ದಾರೆ.