ಮಂಗಳೂರು: ಪಾಂಡೇಶ್ವರ ಠಾಣಾ ಎಎಸ್ಐ ಶ್ರೀಕಲಾ ಅವರು ಇತ್ತೀಚಿಗೆ ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಎಬಿವಿಪಿಯ ನಗರ ಕಾರ್ಯದರ್ಶಿ ಜಯೇಶ್.ಪಿಕೆ ಮಾತನಾಡಿ, ಕಳೆದ ಸೆಪ್ಟಂಬರ್ 27ರಂದು ಶನಿವಾರ ಸಾಯಂಕಾಲ 5 ಗಂಟೆಯ ಸುಮಾರಿಗೆ ವೆನ್ಲಾಕ್ ಪುರುಷ ಶುಶ್ರೂಷಾ ವಿದ್ಯಾರ್ಥಿಗಳು ವೆನ್ಲಾಕ್ ಆಸ್ಪತ್ರೆಯ ಆವರಣದೊಳಗೆ ಆಟವಾಡುತ್ತಿದ್ದ ಸಮಯದಲ್ಲಿ ಎಎಸ್ಐ ಶ್ರೀಕಲಾ ಹಾಗೂ ಸಿಬ್ಬಂದಿಗಳು ಯಾವೂದೇ ವಿಚಾರಣೆ ನಡೆಸದೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಹಾಗೂ ಪ್ರಾಂಶುಪಾಲರ ಅನುಮತಿಯನ್ನು ಪಡೆಯದೆ ಏಕಾಏಕಿ ಒಳಪ್ರವೇಶಿಸಿ ವಿದ್ಯಾರ್ಥಿಗಳ ಮೇಲೆ ಲಾಠಿಯಿಂದ ಹಲ್ಲೆ ನಡೆಸಿರುವುದಲ್ಲದೇ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ. ಮಾತ್ರವಲ್ಲದೇ ಶ್ರೀಕಲಾ ಅವರು ಅಂಗವಿಕಲ ವಿದ್ಯಾರ್ಥಿಯೊಬ್ಬರ ಮೇಲೂ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ರೀತಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವ ಎಎಸ್ಐ ಶ್ರೀಕಲಾ ಹಾಗೂ ಸಿಬ್ಬಂದಿಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣವೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಇದೀಗ ಸುಳ್ಳು ಕೇಸ್ ದಾಖಲಿಸಿ ವಿದ್ಯಾರ್ಥಿಗಳನ್ನು ಬಂಧಿಸುವುದಾಗಿ ಶ್ರೀಕಲಾ ಅವರು ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಖಚಿತ ಸಾಕ್ಷಿಗಳಿರುವುದರಿಂದ ಅವರ ಮೇಲೆ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಯಾವೂದೇ ಕಾರಣವಿಲ್ಲದೇ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವ ಎಎಸ್ಐ ಹಾಗೂ ಸಿಬ್ಬಂದಿಗಳ ವಿರುದ್ಧ ಎಬಿವಿಪಿ ವತಿಯಿಂದ ಉಗ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಬಳಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ವಿದ್ಯಾರ್ಥಿಗಳು ವೆನ್ಲಾಕ್ ಆವರಣದಿಂದ ಮಂಗಳೂರು ನಗರ ಪೊಲೀಸ್ ಅಯುಕ್ತರ ಕಚೇರಿವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಈ ಪ್ರಕರಣದ ಬಗ್ಗೆ ಕೂಲಂಕುಶ ಪರಿಶೀಲನೆ ನಡೆಸಿ, ತಪ್ಪಿಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯದೊರಕಿಸಿಕೊಡಬೇಕೆಂದು ಆಗ್ರಹಿಸಿ ಪೊಲೀಸ್ ಕಮಿಷನರಿಗೆ ಮನವಿ ಸಲ್ಲಿಸಿದರು.