ಕುಂದಾಪುರ : ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿಯರುವ ಕಾಮಗಾರಿಯ ಪರಿಶೀಲನೆ ನಡೆಸಿದರಲ್ಲದೆ, ಇಲಾಖಾ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಂದ ಕಾಮಗಾರಿಯ ಗುಣ ಮಟ್ಟದ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆಯಲ್ಲಿ ಮಾತನಾಡಿದ ಅವರು ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಿಂದ ಹೆಮ್ಮಾಡಿಯ ಬಸ್ಸು ನಿಲ್ದಾಣದವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿ ಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದು, ಇದೀಗ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ 5054 ರ ಯೋಜನೆಯಲ್ಲಿ 110 ಲಕ್ಷ ರೂಪಾಯಿ ಅನುದಾನದಲ್ಲಿ, ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಇಲಾಖಾ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸ್ಥಳೀಯ ಪ್ರಮುಖರಾದ ಚಂದ್ರ ನಾಯ್ಕ್, ಗುತ್ತಿಗೆದಾರ ಗೋಕುಲ್ ಶೆಟ್ಟಿ ಹಾಗೂ ಲೋಕೋಪಯೋಗಿ ಕಿರಿಯ ಇಂಜಿನಿಯರ್ ಮಂಜುನಾಥ್ ಈ ಸಂದರ್ಭದಲ್ಲಿ ಇದ್ದರು.